ತಿರುವನಂತಪುರ:
ಕೇರಳದ ಜನ ನಿಟ್ಟುಸಿರು ಬಿಡುವ ಮೊದಲೇ ಮತ್ತೆ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ಪ್ರಮಾಣದಲ್ಲಿ ಕಡಿಮೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೇರಳಕ್ಕೆ ಬಸ್ ಸಂಚಾರ ಮತ್ತೆ ಆರಂಭ ಮಾಡಿದೆ.
ಇಲಾಖೆಯು ಈ ಮೊದಲು ಕೇರಳದ 14 ಜಿಲ್ಲೆಗಳಲ್ಲಿ ಘೋಷಿಸಿದ್ದ ‘ರೆಡ್ ಅಲರ್ಟ್’ ಅನ್ನು ಹಿಂದಕ್ಕೆ ಪಡೆದುಕೊಂಡಿದ್ದು, ಕೊಂಚ ನಿರಾಳರಾಗುವಂತೆ ಮಾಡಿದೆ. ಎರಡು ವಾರಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಿದೆ. ಆದ್ರೆ ಮುಂದಿನ ಐದು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳನ್ನು ಹೊರತು ಪಡಿಸಿ ಎಲ್ಲ ಕಡೆಯೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.