ಮಂಗಳೂರು:
ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಮುಂದಿನ ತಿಂಗಳು ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸದೆ, ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆವರೆಗೂ ಮುಖ್ಯಮಂತ್ರಿಯನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಹಾಗಾಗಿ 5 ವರ್ಷಗಳ ಕಾಲ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶವನ್ನು ಗಂಡಾಂತರ ಪರಿಸ್ಥಿತಿಗೆ ತಳ್ಳಿದೆ. ವಿದೇಶದಲ್ಲಿ ಕಪ್ಪುಹಣ ವಾಪಸ್ ತರುವುದು, ರೈತರಿಗೆ ಬೆಂಬಲ ಬೆಲೆ, ಸ್ತ್ರೀಯರಿಗೆ ರಕ್ಷಣೆ, ಭಯೋತ್ಪಾದನೆ ಮಟ್ಟ ಹಾಕುವುದಾಗಿ ಭರವಸೆ ನೀಡಿದ್ದರು. ಆದರೆ ಇದ್ಯಾವುದೂ ಆಗಿಲ್ಲ ಎಂದು ದೂರಿದರು.
ಮೋದಿ ನೇತೃತ್ವದ ಸರ್ಕಾರದ ನಾಲ್ಕೂವರೆ ವರ್ಷಗಳ ಆಡಳಿತದ ಸಾಧನೆಯನ್ನು ಗಮನಿಸಿದರೆ, ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ಯುವಕರಿಗೆ ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿಲ್ಲ. ದೇಶದಲ್ಲಿ ಹಿಂದುತ್ವದ ಮೂಲಕ ಜನರ ಭಾವನೆಗಳ ಜತೆ ಚೆಲ್ಲಾಟವಾಡಿ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಬಿಜೆಪಿ ಸದಸ್ಯರು ನೆರೆ ಪರಿಹಾರ, ಮಹದಾಯಿ, ಕಾವೇರಿ ಮತ್ತು ಹೈದರಾಬಾದ್ – ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ವಿಚಾರದಲ್ಲಿ ಮೌನ ವಹಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಜಮ್ಮು – ಕಾಶ್ಮೀರ ಉಗ್ರಗಾಮಿಗಳ ತಾಣವಾಗಿ ಮಾರ್ಪಟ್ಟಿದೆ. ಸಾವಿರಾರು ಯೋಧರು ಹುತಾತ್ಮರಾಗಿದ್ದಾರೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ದೇಶದ ಜನರ ದಾರಿ ತಪ್ಪಿಸುತ್ತಿದೆ ಎಂದು ಟೀಕಿಸಿದರು.