ಮಧುಗಿರಿ
ರಾಜ್ಯದ ರೈತರ ಸಾಲಮನ್ನಾ ಮಾಡಲು 49 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಈ ವಾರದೊಳಗೆ ದೊಡ್ದಬಳ್ಳಾಪುರ ಮತ್ತು ಸೇಡಂ ಕಾರ್ಯಕ್ರಮದಲ್ಲಿ ರೈತರಿಗೆ ಋಣ ಮುಕ್ತ ಪತ್ರವನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 13 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. ಆ ಯೋಜನೆಯನ್ನು ಮುಂದುವರೆಸಲಾಗುವುದು. ಮನೆ ನಿರ್ಮಾಣಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗದ ರೀತಿಯಲ್ಲಿ ಅಧಿಕಾರಿಗಳು ಗಮನಹರಿಸಬೇಕು.
ರಾಜ್ಯದಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಸತತವಾಗಿ ಜಿಲ್ಲೆಯ 10 ತಾಲ್ಲೂಕುಗಳು ಬರಗಾಲಕ್ಕೆ ತುತ್ತಾಗುತ್ತಿದ್ದು, ರೈತ ಕಂಗಾಲಾಗಿದ್ದಾನೆ.
ರೈತರನ್ನು ಕಾಪಾಡಲು ನರೇಗಾ ಕಾಮಗಾರಿಗಳು ಹೆಚ್ಚು ಮಾಡಬೇಕು. ತುಮಕೂರು ಜಿಲ್ಲೆಯಲ್ಲಿ ನರೇಗಾ ಯೋಜನೆ ವೇಗ ಪಡೆಯದೆ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಮೇವು ಬ್ಯಾಂಕ್ಗಳನ್ನು ತೆರೆದು ರಿಯಾಯಿತಿ ದರದಲ್ಲಿ ಮೇವು ವಿತರಿಸಬೇಕು. ಪ್ರತಿ ಹೋಬಳಿಗಳಲ್ಲೂ ಗೋಶಾಲೆ ಪ್ರಾರಂಭಿಸಲು ಸಿದ್ದತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಾಲ್ಲೂಕಿನ ಕೋಡಗದಾಲ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಎರಡು ವರ್ಷ ಕಳೆದರೂ ಈವರೆಗೂ ದುರಸ್ಥಿ ಮಾಡದೆ ಇರುವ್ಯದರಿಂದ, ಗ್ರಾಮಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ಸಭೆಯ ಗಮನಕ್ಕೆ ತಂದಾಗ, ಉಪಮುಖ್ಯಮಂತ್ರಿ ಅಧಿಕಾರಿಗಳ ವಿರುದ್ದ ಕೆಂಡಾಮಂಡ¯ವಾಗಿ ಜಿಲ್ಲೆಯಲ್ಲಿ ಕೆಟ್ಟುಹೋಗಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತ್ವರಿತಗತಿಯಲ್ಲಿ ರಿಪೇರಿ ಮಾಡಿಸಿ ನನ್ನ ಗಮನಕ್ಕೆ ತರಬೇಕೆಂದು ತಿಳಿಸಿದರು.
ಕೃಷಿ ಇಲಾಖೆಯ ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡದಿದ್ದರೆ ರೈತರು ಶಾಪ ಹಾಕುತ್ತಾರೆ. ಆದ್ದರಿಂದ ರೈತರ ಮೇಲೆ ಅಧಿಕಾರಿಗಳು ವಿಶೇಷ ಕಾಳಜಿ ಇಟ್ಟು ಕೆಲಸ ಮಾಡಬೇಕೆಂದು ಸಂಸದ ಎಸ್.ಪಿ.ಮುದ್ದಹನುಮೆಗೌಡ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ