ಬೆಂಗಳೂರು
ಮಂಡ್ಯ ರಾಜಕೀಯ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಬಿಜೆಪಿ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಭೇಟಿಯಾಗಿ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಇಂದು ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸ ಶಾಂಭವಿ ನಿಲಯಕ್ಕೆ ಭೇಟಿ ನೀಡಲಿರುವ ಯಡಿಯೂರಪ್ಪ, ಕೃಷ್ಣ ಜೊತೆ ಮಾತುಕತೆ ನಡೆಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಆಗಮಿಸುವಂತೆ ಆಹ್ವಾನ ನೀಡುವ ಜೊತೆಗೆ ಮಂಡ್ಯ ರಾಜಕೀಯ ಸಂಬಂಧ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಈಗಾಗಲೇ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಮುಂದಾಗಿರುವ ಸುಮಲತಾ ಅಂಬರೀಶ್,ಕೃಷ್ಣ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಈ ಮೊದಲು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ತರಾತುರಿಯಲ್ಲಿ ಅಭ್ಯರ್ಥಿ ಕಣಕ್ಕಿಳಿಸಿದ್ದ ಬಿಜೆಪಿ 2.5 ಲಕ್ಷ ಮತಗಳಿಸಿತ್ತು. ಅಭ್ಯರ್ಥಿ ಡಾ.ಸಿದ್ದರಾಮಯ್ಯ ನಿರೀಕ್ಷೆಗೂ ಮೀರಿ ಮತಗಳಿಕೆ ಮಾಡಿಕೊಂಡು ಪಕ್ಷಕ್ಕೆ ನೆಲೆ ಸಿಗುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಅವರನ್ನೇ ಅಭ್ಯರ್ಥಿ ಆಗಿ ಕಣಕ್ಕಿಳಿಸಬೇಕಾ ಅಥವಾ ಅಭ್ಯರ್ಥಿ ಹಾಕದೇ ಸುಮಲತಾ ಅವರನ್ನು ಬೆಂಬಲಿಸಬೇಕಾ ಎನ್ನುವ ವಿಷಯದಲ್ಲಿ ಕೃಷ್ಣ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ.
ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಇದ್ದು ಸಭೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ನಿಲುವು ಯಾವ ರೀತಿ ಇರಲಿದೆ ಎನ್ನುವ ನಿರ್ಧಾರವನ್ನು ಪ್ರಕಟಿಸಬೇಕಿರುವ ಹಿನ್ನೆಲೆಯಲ್ಲಿ ಪೂರಕವಾಗಿ ಕೃಷ್ಣ ಅವರನ್ನು ಭೇಟಿಯಾಗಿ ಯಡಿಯೂರಪ್ಪ ಸಲಹೆ ಪಡೆಯಲಿದ್ದಾರೆ.