ಬೆಂಗಳೂರು
ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಜ.15ರ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ ಅವರು, ಲೋಕಸಭೆ ಚುನಾವಣೆಗೆ ಜೆಡಿಎಸ್ ಆಯ್ದುಕೊಂಡಿರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆಗೆ 10 ರಿಂದ 12 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ದೇವೇಗೌಡರು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಬೇಡಿಕೆ ಇಟ್ಟಿದ್ದು, ಕಾಂಗ್ರೆಸ್ ಈವರೆಗೆ ಸ್ಪಂದಿಸಿಲ್ಲ.ಮತ್ತು ಮೈಸೂರು,ಕೊಡಗು ಭಾಗವನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಜೆಡಿಎಸ್ಗೆ ಅಷ್ಟು ಸುಲಭವಾಗಿ ಬಿಟ್ಟುಕೊಡುವುದೂ ಇಲ್ಲ ಎಂಬ ಅರಿವು ಇದೆ. ಹೀಗಾಗಿ ರಾಜ್ಯ ನಾಯಕರ ಬದಲಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬಳಿಯೇ ಮಾತುಕತೆ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ.
ಸಂಸದರಾದ ಎಂ.ವೀರಪ್ಪ ಮೊಯ್ಲಿ ಪ್ರತಿನಿಧಿಸುವ ಚಿಕ್ಕಬಳ್ಳಾಪುರ, ಕೆ.ಎಚ್.ಮುನಿಯಪ್ಪ ಪ್ರತಿನಿಧಿಸುವ ಕೋಲಾರ, ಮುದ್ದಹನುಮೇಗೌಡರು ಪ್ರತಿನಿಧಿಸುವ ತುಮಕೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆಯೂ ಹಾಗೂ ಹಳೆ ಮೈಸೂರು ಭಾಗದ ಕ್ಷೇತ್ರಗಳು ಮೈಸೂರು, ಮಂಡ್ಯ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ಬೀದರ್, ವಿಜಯಪುರ ಸೇರಿದಂತೆ 12 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇಡಲಿದೆ.
ಈಗಾಗಲೇ ದೇವೇಗೌಡರು ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಕಳುಹಿಸಿದ್ದು, ಪಟ್ಟಿ ಬಗ್ಗೆ ಚರ್ಚಿಸಲಿದ್ದಾರೆ.ಜೆಡಿಎಸ್ನ ಹಾಲಿ ಸಂಸದರ ಬದಲಾವಣೆ ಬೇಡ ಎಂಬ ಮನವಿಯನ್ನೂ ಅವರು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ