ಮಳೆಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯ

ನವದೆಹಲಿ

     ಕೊಡಗು ಮತ್ತು ಮಲೆನಾಡು ಭಾಗದಲ್ಲಿ ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

     ದೆಹಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕೊಡಗು ಸೇರಿದಂತೆ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ಆಸ್ತಿಪಾಸ್ತಿ ಹಾನಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಿದರು. ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿರ್ವಹಣಾ ನಿಧಿಯಿಂದ ತ್ವರಿತವಾಗಿ ಕನಿಷ್ಠ 250 ಕೋಟಿ ರೂಪಾಯಿ ಬಿಡುಗಡೆ ಮಾಡಿದರೆ, ಮಳೆಯಿಂದ ಕೊಚ್ಚಿ ಹೋಗಿರುವ ರಸ್ತೆಗಳ ದುರಸ್ಥಿಗೆ ನೆರವಾಗುತ್ತದೆ ಎಂದು ಅವರು ಕೋರಿದ್ದಾರೆ. ರಾಜ್ಯ ಸರ್ಕಾರದ ಋಣಮುಕ್ತ ಕಾಯ್ದೆ ಮತ್ತು ಬರ ಪರಿಸ್ಥಿತಿ ಕುರಿತು ಸಹ ಅವರು ಸಮಾಲೋಚನೆ ನಡೆಸಿದರು.

    2ನೇ ಬಾರಿಗೆ ಪರಿಹಾರಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದು, ರಾಜ್ಯದಲ್ಲಿ ಮಳೆಹಾನಿಯಿಂದ 3ಸಾವಿರ ಕೋಟಿ ನಷ್ಟವಾಗಿದೆ. ಹೀಗಾಗಿ ಎನ್‍ಡಿಆರ್‍ಎಫ್‍ನಿಂದ ಬೇಗ ಪರಿಹಾರ ಬಿಡುಗಡೆ ಮಾಡಿ ಎಂದು ಕೋರಿದರು.
ಅಲ್ಲದೆ, ಮಳೆ ಅನಾಹುತದಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಿಗೆ ಹೆಚ್ಚು ಹಾನಿಯಾಗಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮನೆ, ರಸ್ತೆಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಲಾಯಿತು.

     ನಂತರ ಕುಮಾರಸ್ವಾಮಿಯವರು, ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.

     ಪ್ರಮುಖವಾಗಿ ಚಿಕ್ಕಮಗಳೂರು-ಬಿಳಿಕೆರೆ ಮತ್ತು ಬಾಣಾವರ-ಹುಳಿಯಾರು ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವಂತೆ ಮನವಿ ಮಾಡಿದರು. ಸಮುದ್ರಕ್ಕೆ ವ್ಯರ್ಥವಾಗಿ ಸೇರುತ್ತಿರುವ ಕಾವೇರಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮೇಕೆದಾಟು ಯೋಜನೆಗೆ ಅನುಮೋದನೆ ಕೋರಿ ಪ್ರಸ್ತಾವನೆಯನ್ನು ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಸಲ್ಲಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap