ಬೆಂಗಳೂರು
ಕೇಂದ್ರ ಸಚಿವ ಅನಂತ ಕುಮಾರ್ ಅವರು ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅನಂತ ಕುಮಾರ್ ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಅನಂತ ಕುಮಾರ್ ನನಗೆ ಅತ್ಯಂತ ಆತ್ಮೀಯರು. ಆರು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಜನ ಪರ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ರಾಜಕೀಯ ಸಿದ್ಧಾಂತ ಬೇರೆಯೇ ಇದ್ದರೂ ಸಾರ್ವಜನಿಕ ಬದುಕಿನಲ್ಲಿ ಮಾದರಿಯಾಗಿದ್ದಾರೆ.
ಬಹುಶಃ ಅವರ ಆರೋಗ್ಯದ ಬಗ್ಗೆ ಮೊದಲೇ ತಿಳಿದಿದ್ದರೆ ಇಂಥ ಅನಾಹುತವಾಗುತ್ತಿರಲಿಲ್ಲ. ಇತ್ತೀಚೆಗೆ ವಾಜಪೇಯಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಇಬ್ಬರು ಅಕ್ಕ ಪಕ್ಕ ಕುಳಿತಿದ್ದವು. ಆಗಲೂ ಅವರು ಆರೋಗ್ಯವಂತರಾಗಿಯೇ ಕಂಡರು. ಅವರ ಕೆಲಸವನ್ನು ಪಕ್ಷಾತೀತವಾಗಿ ಎಲ್ಲರೂ ಸ್ಮರಿಸುವಂಥದ್ದು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಶೋಕ ವ್ಯಕ್ತಪಡಿಸಿದರು.