ಪ್ರತಿನಂಜು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಕ್ಕೆ ಚಾಲನೆ. ಸಚಿವ ಡಾ.ಅಶ್ವತ್ಥನಾರಾಯಣ

ಹಾವಿನ ಕಡಿತದಿಂದಾಗುವ ಸಾವಿನ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸಬಹುದು ಸಚಿವ ಡಾ.ಅಶ್ವತ್ಥನಾರಾಯಣ
ಬೆಂಗಳೂರು : ನಮ್ಮ ದೇಶವು  ವೈವಿಧ್ಯಮಯ ಜೀವಪರಿಸರವನ್ನು ಹೊಂದಿದೆ. ಇತ್ತೀಚಿಗೆ ಹಾವು ಕಡಿತದ (ಸಂದರ್ಭಗಳಲ್ಲಿ) ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಪ್ರತಿನಂಜು ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ಸ್ಥಾಪನೆಯಿಂದ ಹಾವಿನ ಕಡಿತದಿಂದಾಗುವ ಸಾವಿನ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸಬಹುದು ಎಂದು ಉನ್ನತ ಶಿಕ್ಷಣ, ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಭರವಸೆ ನೀಡಿದರು.
ಅವರು ಇಂದು ನಗರದ ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್ ನ ಐಬಿಎಬಿ ಸಂಸ್ಥೆಯಲ್ಲಿ ನಿರ್ಮಿಸಲಾಗುತ್ತಿರುವ ಪ್ರತಿನಂಜು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಪ್ರತಿನಂಜು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವು  ಸುಮಾರು 7 ಕೋಟಿ ರೂಗಳ ವೆಚ್ಚದಲ್ಲಿ ನಿಮಾರ್ಣವಾಗುತ್ತಿದ್ದು,  ಮುಂದಿನ ಐದು ವರ್ಷಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ.  ಈ ಕೇಂದ್ರವು ದೇಶದಲ್ಲಿ ಪ್ರಮುಖವಾಗಿ ಹಾವಿನ ಕಡಿತದಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣವನ್ನು ತಗ್ಗಿಸಲು ನೆರವಾಗಲಿದೆ ಎಂದರು.
ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ ಉದ್ದೇಶಿತ ಸಂಶೋಧನಾ ಕೇಂದ್ರದಲ್ಲಿ ಸರ್ಪಾಗಾರ, ಸಂಶೋಧನಾ ಪ್ರಯೋಗಾಲಯ, ವಿಷ ಸಂಗ್ರಹಣಾ ವ್ಯವಸ್ಥೆ, ಇನ್ಕ್ಯುಬೇಷನ್ ಸೌಲಭ್ಯ ಮತ್ತು ಡಿಜಿಟಲ್ ಲೈಬ್ರರಿ ಇರಲಿದೆ ಎಂದು ಅವರು ತಿಳಿಸಿದರು.
ರಾಜ್ಯ ಸರಕಾರದ ಐಟಿ/ಬಿಟಿ ಇಲಾಖೆಯ ಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆ (ಕಿಟ್ಸ್) , ಐಬಿಎಬಿ (ಇನ್ಸ್ ಟಿಟ್ಯೂಟ್ ಆಫ್ ಬಯೋಇನ್ ಫರ್ಮ್ಯಾಟಿಕ್ಸ್ ಅಂಡ್ ಅಪ್ಲೈಡ್ ಬಯೊಟೆಕ್ನಾಲಜಿ) ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯ ಸಹಭಾಗಿತ್ವದಡಿ ಈ ನೂತನ ಸಂಶೋಧನಾ ಕೇಂದ್ರವು ಅಸ್ತಿತ್ವಕ್ಕೆ ಬರುತ್ತಿದ್ದು. ಈ ಕೇಂದ್ರವು ಭಾರತದಲ್ಲೇ ಮೊದಲನೆಯದಾಗಿದೆ, ಇಡೀ ದೇಶದಲ್ಲೇ  ಮೊದಲನೇ ಭಾರಿಗೆ  ಇಂತಹ ಒಂದು ಸಂಶೋಧನೆ ಮಾಡಿ  ಮಾರಣಾಂತಿಕ ಹಲವು ಬಗೆಯ ವಿಷಗಳನ್ನು ಸಂಗ್ರಹಿಸಿ ಸಂಶೋಧನೆ ಮಾಡಿ   ಪ್ರತಿನಂಜು  (ಆಂಟಿವೆನಮ್)  ತಯಾರಿಸಲಾಗುವುದು  ಎಂದು ಮಾಹಿತಿ ನೀಡಿದರು.
ಈ ಕೇಂದ್ರವು ಸುಮಾರು 16 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಕಾರ್ಯಾರಂಭ ಮಾಡಲಿದ್ದು. ಇಲ್ಲಿನ ಸರ್ಪಾಗಾರದಲ್ಲಿ 23 ಪ್ರಭೇದಗಳಿಗೆ ಸೇರಿದ 500ಕ್ಕೂ ಹೆಚ್ಚು ಬಗೆಯ ವಿಷಯುಕ್ತ ಜಂತುಗಳನ್ನು ಅಧ್ಯಯನದ ಸಲುವಾಗಿ ಇಡಲಾಗುವುದು. ಜತೆಗೆ, ಭಾರತೀಯ ಉಪಖಂಡದಲ್ಲಿರುವ ವಿಷಪೂರಿತ ಚೇಳುಗಳು ಮತ್ತು ಜೇಡರ ಹುಳುಗಳು ಕೂಡ ಇಲ್ಲಿನ ಸರ್ಪಾಗಾರದಲ್ಲಿ ಇರಲಿವೆ. ದೇಶದಲ್ಲಿ ಪ್ರತಿವರ್ಷ ಹಾವುಗಳ ಕಡಿತದಿಂದ ಸುಮಾರು 58 ಸಾವಿರ ಸಾವು ಸಂಭವಿಸುತ್ತಿದ್ದು, 1.37 ಲಕ್ಷದಷ್ಟು ಮಂದಿ ಅಂಗವೈಕಲ್ಯಕ್ಕೆ ಒಳಗಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಕೇಂದ್ರವು ಅತ್ಯಾಧುನಿಕ ವೈಜ್ಞಾನಿಕ ತಂತ್ರಜ್ಞಾನಗಳ ಮೂಲಕ ಪ್ರತಿವಿಷ ಥೆರಪಿಗಳನ್ನು ಅಭಿವೃದ್ಧಿ ಪಡಿಸಲಿದೆ ಎಂದರು.
ಪ್ರತಿನಂಜು ಚಿಕಿತ್ಸೆಯಲ್ಲಿ ಸಂಶೋಧನೆ ನಡೆಸುವ ಆಸಕ್ತಿ ಇರುವ ನವೋದ್ಯಮಗಳಿಗೆ ಇಲ್ಲಿನ ಇನ್ಕ್ಯುಬೇಷನ್ ಕೇಂದ್ರದಿಂದ (ಪರಿಪೋಷಣಾ ಕೇಂದ್ರ) ಪ್ರೋತ್ಸಾಹ ಒದಗಿಸಲಾಗುವುದು ಎಂದು ಅವರು ನುಡಿದರು.
ನೂತನ ಕೇಂದ್ರವು ವನ್ಯಜೀವಿ ವಿಧಿವಿಜ್ಞಾನ ಸಂಶೋಧನೆ, ಜೈವಿಕ ತಂತ್ರಜ್ಞಾನ ನಾವೀನ್ಯತೆ, ಹಾವು ಕಡಿತ ಕುರಿತು ಅರಿವು ಮತ್ತು ಜನಸಂಪರ್ಕ, ಜತೆಗೆ ಈ ವಲಯದಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ಅರಣ್ಯ ಇಲಾಖೆಗೂ ನೆರವು ನೀಡಲಿದೆ ಎಂದು ಹೇಳಿದರು.
ಸಂಶೋಧನಾ ಕೇಂದ್ರವು ಕಂಡುಹಿಡಿಯಲಿರುವ ಸಂಶೋಧನಾ ಫಲಿತಗಳನ್ನು ತ್ವರಿತ ಗತಿಯಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಇದರಿಂದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸುಧಾರಣೆಯ ಜತೆಗೆ ರಾಜ್ಯದ ಜೈವಿಕ ಆರ್ಥಿಕತೆಯೂ ಬಲಗೊಳ್ಳಲಿದೆ. ಇದಕ್ಕೆ ಪೂರಕವಾಗಿ, ಅಗ್ರಶ್ರೇಣಿಯ ಪ್ರತಿನಂಜು ಉತ್ಪಾದನಾ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಲಾಗುವುದು ಎಂದು ಸಚಿವರು ವಿವರಿಸಿದರು.
ಈ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ  ವಿವಿಧ  ಮಾನವ ಸಂಪನ್ಮೂಲಗಳು ಸಿಬ್ಬಂದಿಗಳನ್ನು  ಕರೆಸಿ ಅವರಿಗೆ  ಹೆಚ್ಚಿನ ರೀತಿಯಲ್ಲಿ  ಮನವರಿಕೆ , ತಿಳುವಳಿಕೆ ಹಾಗೂ ತರಬೇತಿ ಯನ್ನು ನೀಡುವುದರ ಜೊತೆಗೆ, ವಿದ್ಯಾರ್ಥಿಗಳು ಹಾಗೂ ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬಂದು ಈ ಸ್ಥಳಕ್ಕೆ  ಭೇಟಿ ನೀಡಲು ಅವಕಾಶ ಮಾಡಿಕೊಡಲಾಗುವುದು ಮತ್ತು ಈ ಮುಲಕ ಅವರಿಗೆ ಸಾಕಷ್ಟು ಜಾಗೃತಿ ನೀಡಲು ಅವಕಾಶವಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಐಬಿಎಬಿ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಎಸ್.ಸುಬ್ರಹ್ಮಣ್ಯ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ, ಐಐಎಸ್ಸಿಯ ಡಾ.ಕಾರ್ತೀಕ್ ಸುಣಗಾರ್, ಪ್ರೊ.ಶರತ್ ಚಂದ್ರ, ಬೆಂಗಳೂರು ನಗರ ವಿವಿ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ನೃಪತುಂಗ ವಿವಿ ಕುಲಪತಿ ಡಾ.ಶ್ರೀನಿವಾಸ ಬಳ್ಳಿ, ಮಹಾರಾಣಿ ವಿ.ವಿ.ಯ ಪ್ರೊ.ಗೋಮತಿದೇವಿ ಹಾಜರಿದ್ದರು. ಯುನೈಟೆಡ್ ಕಿಂಗ್ಡಮ್ ನ ಲಿವರ್ಪೂಲ್ ಸ್ಕೂಲ್ ಆಫ್ ಟ್ರಾಪಿಕಲ್ ಮೆಡಿಸಿನ್ ಸಂಸ್ಥೆಯ ಪ್ರೊ.ನಿಕೊಲಸ್ ಕೇಸ್ವೆಲ್ ಹಾಗೂ ಐಟಿಬಿಟಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಅವರು ವರ್ಚುವಲ್ ಮೂಲಕ ಭಾಗವಹಿಸಿದ್ದರು.

Recent Articles

spot_img

Related Stories

Share via
Copy link
Powered by Social Snap