ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಭಾಗ್ಯಗಳ ಬಗ್ಗೆ ಘೋಷಣೆ ಹೊರಡಿಸಲು ನಾಳೆ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಶುಕ್ರವಾರ ಜೂನ್ 2ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಅಂದು ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಸ್ಪಷ್ಟ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.
ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಹಲವು ಸಚಿವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ಸಭೆ ಏರ್ಪಟ್ಟಿತ್ತು.ಚುನಾವಣಾ ಗ್ಯಾರಂಟಿ ಯೋಜನೆಗಳ ಜಾರಿಯ ವಿಧಾನಗಳ ಬಗ್ಗೆ ಇಂದು ಚರ್ಚೆಯಾಗಿದ್ದು ನಾಳೆ ಮತ್ತೊಂದು ಸುತ್ತಿನ ಚರ್ಚೆಯಾಗಲಿದೆ. ಸಚಿವರುಗಳು ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿಗೆ ಹಣಕಾಸು ಕ್ರೋಢೀಕರಣ ಹಾಗೂ ಪೂರಕ ದಾಖಲಾತಿ ಎಲ್ಲವೂ ಒಳಗೊಂಡು ಕಾಲಾವಕಾಶದ ಅಗತ್ಯ ಇದೆ. ಈ ನಿಟ್ಟಿನಲ್ಲಿ ತರಾತುರಿಯಲ್ಲಿ ಜಾರಿ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂಬುದು ತಿಳಿದುಬಂದಿರುವ ಮಾಹಿತಿ.ಈ ಹಿನ್ನಲೆಯಲ್ಲಿ ಸಚಿವರ ಜೊತೆಗೆ ಚರ್ಚೆ ನಡೆಸಿದ ಬಳಿಕ ಮತ್ತೊಂದು ಸುತ್ತು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
