ಯುವಕರಿಗೆ ಉದ್ಯೋಗ ಕಲ್ಪಿಸಲು ತರಬೇತಿ ಕೇಂದ್ರಗಳ ಸ್ಥಾಪನೆ
ಬೆಂಗಳೂರು : ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ)ದ ಅಧ್ಯಕ್ಷ ಸಂಜೀವ್ ಬಜಾಜ್ ಹಾಗೂ ಮಹಾ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಅವರು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಐಐ ಅಧ್ಯಕ್ಷ ಸಂಜೀವ್ ಬಜಾಜ್, ರಾಜ್ಯದಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಹಾಗೂ ಉದ್ಯೋಗ ಸೃಜನೆಯಲ್ಲಿ ಸಿಐಐ ಕೈಜೋಡಿಸಲು ಉತ್ಸುಕವಾಗಿದ್ದು, ಬೆಂಗಳೂರಿನ ಹೊರಗೆ ಕೈಗಾರಿಕಾ ಕೇಂದ್ರಗಳಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ತುಮಕೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ನಗರಗಳಲ್ಲಿ ತರಬೇತಿ ಕೇಂದ್ರಗಳನ್ನು ತೆರೆಯುವಂತೆ ಸಲಹೆ ನೀಡಿದರು. ಈ ಕುರಿತು ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಿದರು.
ರಾಜ್ಯದ ಕೈಗಾರಿಕಾ ಸ್ನೇಹಿ ವಾತಾವರಣದ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕೈಗಾರಿಕೋದ್ಯಮಿಗಳನ್ನೂ ಒಳಗೊಂಡಂತೆ ಸಂಪೂರ್ಣ ವ್ಯವಸ್ಥೆಯೇ ಒಂದಾಗಿ ಶ್ರಮಿಸುತ್ತಿದೆ. ಇದರಿಂದಾಗಿ ರಾಜ್ಯವು ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ, ಸ್ಟಾರ್ಟಪ್ಗಳಲ್ಲಿ, ನಾವೀನ್ಯತೆಯಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೈಡ್ರೋಜನ್ ಎನರ್ಜಿ, ಅಮೋನಿಯಾ ಉತ್ಪಾದನೆ, ಸೆಮಿ-ಕಂಡಕ್ಟರ್ ತಯಾರಿಕೆ, ವಿದ್ಯುತ್ ವಾಹನಗಳ ತಯಾರಿಕೆ ಮೊದಲಾದ ಹೊಸ ಹೊಸ ವಲಯಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದ್ದಾರೆ. ದಾವೊಸ್ ನ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಹಾಗೂ ನಂತರದ ದಿನಗಳಲ್ಲಿ 1.31 ಲಕ್ಷ ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಅತ್ಯಂತ ವ್ಯವಸ್ಥಿತವಾಗಿ ಕೈಗೊಳ್ಳಲು ಹಾಗೂ ರಾಜ್ಯವನ್ನು ಸಂಶೋಧನೆ ಮತ್ತು ಅಭಿವೃದ್ಧಿಯ ನೆಲೆಯಾಗಿ ರೂಪಿಸಲು ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಗ್ಯಾರೇಜಿನಿಂದ ಸಂಶೋಧನಾ ಸಂಸ್ಥೆಗಳ ವರೆಗೆ ವಿವಿಧ ಹಂತಗಳಲ್ಲಿ ನಡೆಯುವ ಸಂಶೋಧನೆಗಳಿಗೆ ಮಾನ್ಯತೆ ನೀಡುವುದು, ಬೆಂಬಲ ನೀಡುವುದು ಈ ನೀತಿಯ ಗುರಿಯಾಗಿದೆ. ಇದರ ಅನುಷ್ಠಾನದಲ್ಲಿ ಸಿಐಐ ಸಹಕಾರ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಇದಲ್ಲದೆ ಉದ್ಯೋಗ ಸೃಜನೆಗೆ ಒತ್ತು ನೀಡುವ ಕೈಗಾರಿಕೋದ್ಯಮಿಗಳಿಗೆ ಹೆಚ್ಚುವರಿ ಪ್ರೋತ್ಸಾಹಕ ನೀಡುವ ಉದ್ಯೋಗ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ಇದರಡಿ ಕೌಶಲ್ಯಾಭಿವೃದ್ಧಿಗೂ ಒತ್ತು ನೀಡಲಾಗುತ್ತಿದ್ದು, ಇಂಡಸ್ಟ್ರಿ 4.0 ಕ್ಕೆ ಅಗತ್ಯವಿರುವ ಕುಶಲ ಮಾನವ ಸಂಪನ್ಮೂಲ ಒದಗಿಸಲು ರಾಜ್ಯದ ಐಟಿಐ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳನ್ನು ಉನ್ನತೀಕರಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನ ಹೊರಗೆ ಇರುವ ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಸ್ಟಾರ್ಟಪ್ಗಳು, ರಕ್ಷಣಾ ಉಪಕರಣ ಮತ್ತು ಏರೋಸ್ಪೇಸ್ ವಲಯಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸಿಐಐ ಯು ಸ್ಟಾರ್ಟಪ್ಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ರೂಪಿಸಲು ಹಾಗೂ ಈ ಕುರಿತು ಸರ್ಕಾರದೊಂದಿಗೆ ಕೈಜೋಡಿಸಲು ಇಚ್ಛಿಸಿರುವುದಾಗಿ ಸಂಜೀವ್ ಬಜಾಜ್ ಅವರು ತಿಳಿಸಿದರು.
ಇದಕ್ಕೆ ಸಮ್ಮತಿಸಿದ ಮುಖ್ಯಮಂತ್ರಿಯವರು, ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಇದಲ್ಲದೆ, ಕೈಗಾರಿಕೋದ್ಯಮ ವಲಯದ ಅಭಿವೃದ್ಧಿಗೆ ಅಗತ್ಯವಿರುವ ಅಂಶಗಳು, ಸರ್ಕಾರದಿಂದ ಇರುವ ನಿರೀಕ್ಷೆಗಳ ಕುರಿತು ಅರಿತುಕೊಳ್ಳಲು ಆಗಾಗ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತು ಸಿಐಐ ಪದಾಧಿಕಾರಿಗಳು ಉಪಸ್ಥಿತರಿದ್ದರು.
