ದಕ್ಷಿಣ ಕನ್ನಡ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದೆ. ಅನ್ಯ ಧರ್ಮದ ವಿದ್ಯಾರ್ಥಿ- ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿದ ಅನ್ಯ ಕೋಮಿನ ಯುವಕರ ತಂಡವು ಹಲ್ಲೆ ನಡೆಸಿ, ಬೆದರಿಕೆ ಹಾಕಿದೆ.
ಈ ಘಟನೆ ಉಪ್ಪಿನಂಗಡಿಯ ಬಾಜಾರು ಎಂಬಲ್ಲಿ ನಡೆದಿದೆ. ವಾರದ ಹಿಂದೆ ಈ ಪ್ರಕರಣ ನಡೆದಿದೆ ಎಂದು ಹೇಳಲಾಗುತ್ತಿದ್ದರೂ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯೊಬ್ಬಳು ಪರಿಚಿತ ವಿದ್ಯಾರ್ಥಿಯೊಂದಿಗೆ ಇದ್ದುದ್ದನ್ನು ನೋಡಿದ ಯುವಕರ ತಂಡವು ತಡೆದು ನಿಲ್ಲಿಸಿದೆ. ಬಳಿಕ ಯಾರು, ಏನು, ಎತ್ತ ಎಂದು ತಮ್ಮದೇ ಭಾಷೆಯಲ್ಲಿ ಸಂಭಾಷಣೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೀಗ ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
