ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ, ಬ್ಲಾಕ್ ಅಧ್ಯಕ್ಷರಿಗೆ, ಕಾಂಗ್ರೆಸ್ ಪದಾಧಿಕಾರಿಗಳಿಗೆ ಮತ್ತು ನಗರಸಭೆ ಸದಸ್ಯರುಗಳಿಗೆ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಆಂತರಿಕ ವಿಷಯಗಳನ್ನು ಚರ್ಚಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ದ ಪಕ್ಷದ ವರಿಷ್ಟರ ಗಮನಕ್ಕೆ ತರುವುದು ಸೇರಿದಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಿರುವುದು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವಂತೆ ಎನ್.ಡಿ.ಕುಮಾರ್ ಪತ್ರಿಕಾ ಹೇಳಿಕೆ ನೀಡಿರುವುದರ ಸಂಬಂಧ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯಿತು.
ವರಿಷ್ಟರ ಗಮನಕ್ಕೆ ತಾರದೆ ಮುಂಚೂಣಿ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಯಾವುದೇ ರೀತಿಯ ಗೊಂದಲಕರ ಹೇಳಿಕೆಗಳನ್ನು ಕೊಡಬಾರದು. ಮುಂದಿನ ದಿನಗಳಲ್ಲಿ ಯಾರಾದರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಡಿ.ಸಿ.ಸಿ.ಅಧ್ಯಕ್ಷ ಫಾತ್ಯರಾಜನ್ ಎಚ್ಚರಿಸಿದರು.
ಶಕ್ತಿ ಕಾರ್ಯಕ್ರಮ, ರಾಫೆಲ್ ಹಗರಣ ಮತ್ತು ನೋಟು ಅಮಾನ್ಯೀಕರಣ, ಜಿಲ್ಲಾ ಕಾಂಗ್ರೆಸ್ ಸಮ್ಮೇಳನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ.ಮನೋಹರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಡಿ.ರಾಜಪ್ಪ, ಸೇವಾದಳದ ಅಶ್ರಫ್ಆಲಿ, ನಾಗರಾಜ್ ಜಾನ್ಹವಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಚಾಂದ್ಪೀರ್ ಸೇರಿದಂತೆ ವಿವಿಧ ಬ್ಲಾಕ್ ಹಾಗೂ ಘಟಕದ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸಿದ್ದರು.