ನವದೆಹಲಿ:
ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಸಿಟಿ ರವಿಕುಮಾರ್ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಫೆಬ್ರುವರಿ 10 ರಂದು ನೀಡಿದ್ದ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಮಾತನಾಡಿ, ಸಂಸ್ಥೆಯ ಪರವಾಗಿ ಆದೇಶವಿದ್ದರೂ, ಹೈಕೋರ್ಟ್ನ ವಿಭಾಗೀಯ ಪೀಠವು ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ ಎಂದರು.
ಅಂತಿಮ ವರದಿಯನ್ನು ಯಾವಾಗ ಸಲ್ಲಿಸುತ್ತೀರಿ ಎಂದು ಹೈಕೋರ್ಟ್ ತನಿಖಾ ಸಂಸ್ಥೆಯನ್ನು ಕೇಳಿದ್ದು, ಮುಂದಿನ ವಿಚಾರಣೆವರೆಗೆ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಸಿಬಿಐ ವಿಚಾರಣೆಗೆ ತಡೆ ನೀಡಿ ಪ್ರಕರಣವನ್ನು ಮುಂದೂಡಿದೆ.
ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿಯನ್ನು ಆದರಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿದೆ.
ಇ.ಡಿ ತನಿಖೆಯನ್ನು ಆಧರಿಸಿ, ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿತ್ತು. ಈ ಸಂಬಂಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು ಮತ್ತು 2020ರ ಅಕ್ಟೋಬರ್ 3ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/07/supreme-3.jpg)