ತುಮಕೂರು :
ಜಿಲ್ಲೆಯ ತುಮಕೂರು ಮಹಾನಗರಪಾಲಿಕೆ, ಚಿಕ್ಕನಾಯಕನಹಳ್ಳಿ ಹಾಗೂ ಮಧುಗಿರಿ ಪುರಸಭೆ, ಗುಬ್ಬಿ ಹಾಗೂ ಕೊರಟಗೆರೆ ಪಟ್ಟಣ ಪಂಚಾಯತಿಗೆ ಇಂದು ಚುನಾವಣೆ ನಡೆಯಲಿದ್ದು, ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು.
ಅವರು ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯಲಿರುವ ಪಾಲಿಕೆ ಸೇರಿ 5 ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಮತದಾರರು ಮತದಾನ ಮಾಡಲಿದ್ದಾರೆ. ಮತದಾನ ಪ್ರಕ್ರಿಯೆಯು ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಡೆಯಲಿದ್ದು, ಮತದಾರರು ಯಾವುದೇ ಆಮಿಷಕ್ಕೊಳಗಾಗದೆ ನಿರ್ಭಯವಾಗಿ ಮತದಾನ ಮಾಡಬೇಕೆಂದು ಅವರು ಮನವಿ ಮಾಡಿದರು.
ಈ ಬಾರಿ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುವುದು. ಚುನಾವಣಾ ಗುರುತಿನ ಚೀಟಿ ಇಲ್ಲದವರು ಮತದಾರರು ತಮ್ಮ ಪಾಸ್ಪೋರ್ಟ್, ವಾಹನಾ ಚಾಲನಾ ಪರವಾನಗಿ, ಕೇಂದ್ರ/ರಾಜ್ಯ ಸರ್ಕಾರ/ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡಿರುವ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಸಾರ್ವಜನಿಕ ವಲಯದ ಬ್ಯಾಂಕ್/ಕಿಸಾನ್ ಮತ್ತು ಅಂಚೆ ಕಚೇರಿಯ ಭಾವಚಿತ್ರವಿರುವ ಪಾಸ್ಪುಸ್ತಕ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡಿರುವ ಗುರುತಿನ ಚೀಟಿ, ಭಾವಚಿತ್ರವಿರುವ ನೋಂದಾಯಿತ ಡೀಡ್ಗಳು/ಪಟ್ಟಾಗಳು ಹಾಗೂ ಮತ್ತಿತರ ಆಸ್ತಿ ದಾಖಲೆಗಳು, ಭಾವಚಿತ್ರವಿರುವ ಪಡಿತರ ಚೀಟಿ, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಎಸ್ಸಿ/ಎಸ್ಟಿ/ಓಬಿಸಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶ ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ/ ಪಿಂಚಣಿ ಸಂದಾಯ ಆದೇಶದಂತಹ ಪಿಂಚಣಿ ದಾಖಲೆಗಳು/ ವೃದ್ಧಾಪ್ಯ ವೇತನ ಆದೇಶಗಳು/ ವಿಧವಾ ವೇತನ ಆದೇಶಗಳು, ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ ಪತ್ರ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ, ಮಾಜಿ ಯೋಧರ ಭಾವಚಿತ್ರವಿರುವ ಸಿಎಸ್ಡಿ ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ನರೇಗಾ ಯೋಜನೆಯ ಭಾವಚಿತ್ರವಿರುವ ಜಾಬ್ ಕಾರ್ಡ್, ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ಮಹಾನಗರಪಾಲಿಕೆ/ನಗರಸಭೆ/ ಪುರಸಭೆ/ಗ್ರಾಮಪಂಚಾಯತಿಗಳು/ಮತ್ತಿತರ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರೀಕರ ಗುರುತಿನ ಚೀಟಿ, ಆಧಾರ್ ಕಾರ್ಡ್, ಭಾವಚಿತ್ರವಿರುವ ಆರೋಗ್ಯವಿಮಾ ಯೋಜನೆ ಸ್ಮಾರ್ಟ್ ಕಾರ್ಡ್, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವ ಕುಟುಂಬ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧವನ್ನೊಳಗೊಂಡ ಭಾವಚಿತ್ರವಿರುವ ತಾತ್ಕಾಲಿಕ/ ಮೂಲ ಪಡಿತರ ಚೀಟಿ, ಪಾನ್ ಕಾರ್ಡ್ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಮಹಾ ನಗರ ಪಾಲಿಕೆ ವ್ಯಾಪ್ತಿಗೆ 1084 ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 1408 ಮತಗಟ್ಟೆ ಸಿಬ್ಬಂದಿ, 29 ಸೆಕ್ಟರ್ ಅಧಿಕಾರಿ, 773 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 25 ಸೆಕ್ಟರ್ ಮೊಬೈಲ್ಗಳನ್ನು ನಿಯೋಜಿಸಲಾಗಿದೆ.
ಈ ಚುನಾವಣೆಯಲ್ಲಿ ಅಂತಿಮವಾಗಿ ಪಾಲಿಕೆ-215, ಚಿಕ್ಕನಾಯಕನಹಳ್ಳಿ ಪುರಸಭೆ-73, ಮಧುಗಿರಿ ಪುರಸಭೆ-68, ಗುಬ್ಬಿ ಪಟ್ಟಣ ಪಂಚಾಯತಿ-68, ಕೊರಟಗೆರೆ ಪಟ್ಟಣ ಪಂಚಾಯತಿ-60 ಸೇರಿ ಒಟ್ಟು 484 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮತದಾನಕ್ಕಾಗಿ 352 ಕಂಟ್ರೋಲ್ ಯುನಿಟ್ ಹಾಗೂ 352 ಬ್ಯಾಲೆಟಿಂಗ್ ಯೂನಿಟ್ಗಳನ್ನು ಬಳಸಲಾಗುತ್ತಿದೆ.
ಅರ್ಹ ಮತದಾರರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ತಪ್ಪದೇ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ವಿ.ಗೋಪಿನಾಥ್ ಅವರು ಚುನಾವಣೆ ನಡೆಯಲಿರುವ ಎಲ್ಲಾ ಮತಗಟ್ಟೆ ಹಾಗೂ ಡಿಮಸ್ಟರಿಂಗ್ ಕೇಂದ್ರಗಳಿಗೆ ಸೂಕ್ತ ಭದ್ರತೆ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾನದ ನಂತರ ವಿದ್ಯುನ್ಮಾನ ಮತಯಂತ್ರಗಳನ್ನು ಇಡುವ ಸ್ಟ್ರಾಂಗ್ ರೂಮ್ಗೆ ಭದ್ರತೆ ಒದಗಿಸಲು ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ: ಶೋಭಾರಾಣಿ, ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
