ಬಳ್ಳಾರಿ:
ಗ್ರಾಮೀಣ ಮಟ್ಟದಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಗ್ರಾಮೀಣ ಮಟ್ಟದ ಸಾರ್ವಜನಿಕರಿಗೆ ಅವಶ್ಯವಿರುವ ಹಾಗೂ ದೀರ್ಘಕಾಲ ಬಾಳಿಕೆ ಬರುವ ಆಸ್ತಿ ಸೃಜನೆ ಕಾಮಗಾರಿಗಳ ಅನುಷ್ಠಾನದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳುವಿಕೆ ಕುರಿತು ಕಾರ್ಯಾಗಾರವನ್ನು ಸೆ.7ರಂದು ಬೆಳಗ್ಗೆ 9.30ಕ್ಕೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.
ಈ ಕಾರ್ಯಾಗಾರಕ್ಕೆ ಜಿಪಂ ಅಧ್ಯಕ್ಷರು ಮತ್ತು ಶಾಸಕರು ಚಾಲನೆ ನೀಡಲಿದ್ದಾರೆ ಎಂದು ವಿವರಿಸಿರುವ ಅವರು, ಈ ಕಾರ್ಯಾಗಾರದಲ್ಲಿ ಜಿಪಂ ಉಪಾಧ್ಯಕ್ಷರು, ವಿಧಾನಪರಿಷತ್ ಸದಸ್ಯರು, ಸಂಸದರು, ಜಿಪಂ ಸದಸ್ಯರು, ಜಿಲ್ಲೆಯ ಎಲ್ಲ ತಾಲೂಕು ಪಂಚಾಯತಿಗಳ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸದಸ್ಯರು, ಗ್ರಾಪಂಗಳ ಅಧ್ಯಕ್ಷರು, ಜಿಲ್ಲೆಯ ನರೇಗಾ ಯೋಜನೆಯ ತಂತ್ರಾಂಶದಲ್ಲಿ ನಮೂದಾಗಿರುವ ಸಾಮಗ್ರಿ ಸರಬರಾಜುದಾರರು, ಜಿಲ್ಲಾಮಟ್ಟದ ಅನುಷ್ಠಾನ ಇಲಾಖಾ ಅಧಿಕಾರಿಗಳು, ತಾಪಂ ಇಒಗಳು, ಪಿಡಿಒಗಳು, ಪಂಚಾಯತ್ರಾಜ್ ಇಂಜನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ಗಳು, ಎಲ್ಲಾ ಸಂಯೋಜಕರು,ತಾಂತ್ರಿಕ ಸಹಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.