ಪರವಾನಿಗೆ ಇಲ್ಲದ ಖಾಸಗಿ ಪ್ರಯಾಣ ವಾಹನಗಳ ಲೈಸನ್ಸ್ ರದ್ದು :ಲಕ್ಷ್ಮಣ ಸವದಿ 

ಹಾವೇರಿ
 
      ಕೋವಿಡ್ ಲಾಕ್‍ಡೌನ್ ಸಡಿಲಿಕೆ ನಂತರ ತ್ರೈಮಾಸಿಕ ಯೋಜನೆಗಳನ್ನು ರೂಪಿಸಿಕೊಂಡು ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಸಚಿವರಾದ  ಲಕ್ಷ್ಮಣ ಸಂಗಪ್ಪ ಸವದಿ  ಅವರು ಸೂಚನೆ ನೀಡಿದರು.
    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ದಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣಿಕವಾಗಿ ಶ್ರಮಿಸುವ ನಿಟ್ಟಿನಲ್ಲಿ ಕಾರ್ಯಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
    ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್‍ಗಳು ಓಡಾಡುತ್ತಿವೆ, ಈ ಪೈಕಿ ಯಾವ ರೂಟ್‍ಗಳು ಲಾಭದಾಯಕ, ಯಾವ ಮಾರ್ಗಗಳಲ್ಲಿ ನಷ್ಟ  ಉಂಟಾಗುತ್ತಿದೆ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್‍ಗಳು ಓಡಾಡುತ್ತವೆ ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಮಾರ್ಗಗಳಲ್ಲಿ  ಲಾಭ ತರುವ ನಿಟ್ಟಿನಲ್ಲಿ ಯೋಜನೆಯನ್ನು ತಯಾರಿಸಿ. ಪ್ರತಿ ಮೂರು ತಿಂಗಳಿಗೊಮ್ಮೆ ಪ್ಲಾನ್‍ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮವಹಿಸಿ ಎಂದು ಸೂಚನೆ ನೀಡಿದರು.
    ನಷ್ಟದಲ್ಲಿರುವ ಮಾರ್ಗಗಳು ಯಾವ ಕಾರಣಕ್ಕೆ ಆದಾಯ ಬರುವುದಿಲ್ಲ ಎಂಬುದನ್ನು ಪತ್ತೆಮಾಡಿ. ಆ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಲಾಭ ತರುವ ಮಾರ್ಗಗಳಾಗಿ ಪರಿವರ್ತಿಸುವಂತೆ ಸಲಹೆ ನೀಡಿದರು. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಬೇಕು, ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು, ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸವನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರದ್ದುಮಾಡಿ:
     ಸಾರಿಗೆ ಬಸ್ ನಿಲ್ದಾಣ 500 ಮೀಟರ್ ವ್ಯಾಪ್ತಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು, ಇಳಿಸುವುದು ಹಾಗೂ ಸಾಮಥ್ರ್ಯಕ್ಕೆ ಮೀರಿ ಪ್ರಯಾಣಿಕರನ್ನು ಕರೆದೊಯ್ಯುವುದು, ಪರವಾನಿಗೆ ಪಡೆಯದೆ ಬಸ್, ಟ್ರ್ಯಾಕ್ಸ್, ಟೆಂಪೋಟ್ರಾವೆಲ್ಸ್ ಓಡಾಟಕ್ಕೆ ಕಡಿವಾಣ ಹಾಕಬೇಕು. ಇಂತಹ ವಾಹನಗಳ ಪರಿವಾನಿಗೆಗಳನ್ನು ರದ್ದುಮಾಡಿ ಮೊಕದ್ದಮೆ ದಾಖಲಿಸಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಾಯವ್ಯ ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆಮಾಡಿ ಇವುಗಳಿಗೆ ಕಡಿವಾಣ ಹಾಕಿದರೆ ನಷ್ಟ ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಹೊಸ ಬಸ್ ಬೇಡಿಕೆ:
 
     ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಜಿಲ್ಲೆಯ ರಸ್ತೆ ಸಾರಿಗೆ  ಸಂಸ್ಥೆಯ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನಿಷ್ಠ 100 ರಿಂದ 150 ಹೊಸ ಬಸ್‍ಗಳನ್ನು ಏಕ ಕಾಲದಲ್ಲಿ ನೀಡಬೇಕು.  ಜಿಲ್ಲೆಯಲ್ಲಿ ಅವಶ್ಯವಿರುವ ಬಸ್ ನಿಲ್ದಾಣ, ಸಾರಿಗೆ ಡಿಪೋಗಳ ಉನ್ನತೀಕರಣ ಕಾಮಗಾರಿ, ನವೀಕರಣಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
    ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ ಅವರು ತಮ್ಮ ಕ್ಷೇತ್ರದ ರಸ್ತೆ ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಸಲ್ಲಿಸಿ ರಾಣೇಬೆನ್ನೂರು ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸಬೇಕು. ಸವಣೂರು ಬಸ್ ನಿಲ್ದಾಣ, ಗುತ್ತಲ ಬಸ್ ನಿಲ್ದಾಣ ನವೀಕರಣ, ಹಾವೇರಿ ಬಸ್ ನಿಲ್ದಾಣದ ವಿಸ್ತರಣೆ ಹಾಗೂ  ಕದರಮಂಡಲಗಿಗೆ ಹೊಸ ಬಸ್ ನಿಲ್ದಾಣ ನಿರ್ಮಾಣ, ಸವಣೂರು ಹೊಸ ಬಸ್ ಡಿಪೋ, ಹಾವೇರಿ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಜಿಲ್ಲೆಯ ಸಾರಿಗೆ ಸಂಪರ್ಕವಿಲ್ಲದ ಮಾರ್ಗಗಳಲ್ಲಿ  ಬಸ್ ವ್ಯವಸ್ಥೆ ಕಲ್ಪಿಸುವುದು, ಲಾಕ್‍ಡೌನ್ ಮುಗಿಯುವವರೆಗೂ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಟೋಲ್ ಫೀ ಸಂಗ್ರಹಿಸದಂತೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಸಾರಿಗೆ ಸಚಿವರ ಗಮನ ಸೆಳೆದರು.
 
     ಈ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರಿಗೆ ಸಚಿವರು, ಆಯಾ ಕ್ಷೇತ್ರದ ಶಾಸಕರ ಬೇಡಿಕೆ ಹಾಗೂ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಹೊಸ ಕಟ್ಟಡ ಮತ್ತು ನವೀಕರಣಕ್ಕೆ ಕ್ರಿಯಾ ಯೋಜನೆ ರೂಪಿಸಿ. ಈ ಕಾಮಗಾರಿಗಳಿಗೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
    ಜಿಲ್ಲಾ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಕ ಜಗದೀಶ್ ಅವರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ 544 ಬಸ್‍ಗಳಿವೆ, ನಿತ್ಯ 503 ಅನುಸೂಚಿ ಕಾರ್ಯಾಚರಣೆ ಮಾಡಲಾಗುತ್ತದೆ. ಪ್ರತಿದಿನ 1.82 ಲಕ್ಷ ಕಿ.ಮೀ. ವಾಹನಗಳು ಕ್ರಮಿಸುತ್ತವೆ. ನಿತ್ಯ 52.30 ಲಕ್ಷ ರೂ. ಆದಾಯ ಬರುತ್ತದೆ. 2312 ಜನ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 2019-20ನೇ ಸಾಲಿನಲ್ಲಿ 52 ಹೊಸ ಬಸ್‍ಗಳು ಬಂದಿವೆ, 39 ಹಳೆಯ ಬಸ್‍ಗಳನ್ನು ತೆಗೆದುಹಾಕಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ ಮಾರ್ಚ್ 22 ರಿಂದ ಮೇ 3ರವರೆಗೆ ಸರ್ಕಾರದ ಆದೇಶದಂತೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.
 
     ಮೇ 4 ರಿಂದ 18ರವರೆಗೆ ಬಸ್ ಸಂಚಾರ ಆರಂಭಿಸಿ 61 ಅನುಸೂಚಿಗಳನ್ನು ಮಾತ್ರ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಅವಧಿಯಲ್ಲಿ 5.91 ಲಕ್ಷ ರೂ. ಗಳಿಕೆಯಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್ ಸಂಚಾರ ಆರಂಭಿಸಿದ ಕಾರಣ ಪ್ರತಿ ಕಿ.ಮೀ. 20.62 ರೂ.ಗಳಿಸಿದೆ. ವಾಸ್ತವವಾಗಿ ಪ್ರತಿ ಕಿ.ಮೀ. 46 ರೂ. ವೆಚ್ಚವಾಗುತ್ತದೆ. ಈ ಅವಧಿಯಲ್ಲಿ ಪ್ರತಿ ಕಿ.ಮೀ.ಗೆ 35.28 ರೂ. ನಷ್ಟ ಸಂಸ್ಥೆಗೆ ಉಂಟಾಗಿದೆ. ಲಾಕ್‍ಡೌನ್‍ನಿಂದ ಮಾರ್ಚ್ 22 ರಿಂದ ಈವರೆಗೆ 41.15 ಕೋಟಿ ರೂ. ಸಾರಿಗೆ ಆದಾಯ ಗಳಿಕೆ ಕಡಿಮೆಯಾಗಿದೆ ಎಂದು ವಿವರಿಸಿದರು.
      ಸಭೆಯಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಬಿ.ಪಾಟೀಲ,  ಜಿಲ್ಲಾ ಪಂಚಾಯತ್ ಸದಸ್ಯರಾದ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗ ಹಾಗೂ ಹುಬ್ಬಳ್ಳಿ ವಿಭಾಗದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link