ಬಿಜೆಪಿಯಿಂದ ಮತದಾರರ ಚೇತನ ಮಹಾಭಿಯಾನ: ಶೋಭಾ ಕರಂದ್ಲಾಜೆ

ಬೆಂಗಳೂರು:

     ದೇಶದ ಮತದಾರರು ಮಾನ್ಯ ನರೇಂದ್ರ ಮೋದಿಯವರ ಕ್ರಿಯಾಶೀಲ ನಾಯಕತ್ವದಲ್ಲಿ ಹಾಗೂ ಬಿಜೆಪಿಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಈ ಕಾರಣದಿಂದಲೇ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಸತತವಾಗಿ ಕೇಂದ್ರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಎನ್‍ಡಿಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ.

     ಈಗ ಮತ್ತೊಮ್ಮೆ 2024ರ ಲೋಕಸಭೆ ಚುನಾವಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ದೇಶವನ್ನು ಮತ್ತೆ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ನಂಬಿಕೆಯನ್ನು ದೇಶದ ಮತದಾರರು ಹೊಂದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಚೇತನ ಮಹಾಭಿಯಾನಕ್ಕೆ ಪಕ್ಷವು ಸಿದ್ಧತೆ ಮಾಡಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.

    ಪ್ರತಿ ಲೋಕಸಭಾ ಚುನಾವಣೆಗೂ ಮುನ್ನ ಮತದಾರ ಪಟ್ಟಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ, ಇದು ಚುನಾವಣಾ ವ್ಯವಸ್ಥೆಯಲ್ಲಿ ಅತ್ಯಂತ ಮುಖ್ಯವಾದ ಪ್ರಕ್ರಿಯೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾರವರ ನಿರ್ದೇಶನದಂತೆ ಹೊಸ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯವನ್ನು ಆದ್ಯತೆಯ ಮೇರೆಗೆ ಮಾಡಬೇಕಾಗಿದೆ ಎಂದು ತಿಳಿಸಿದರು. 58 ಸಾವಿರಕ್ಕೂ ಹೆಚ್ಚು ಬೂತ್‍ಗಳಲ್ಲಿ ಈ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

    ಪ್ರತೀ ಜಿಲ್ಲೆಯಲ್ಲಿ ಈ ಕಾರ್ಯಕ್ಕಾಗಿ 3 ಸದಸ್ಯರ ಜಿಲ್ಲಾ ಸಮಿತಿ ಮತ್ತು ವಿಧಾನಸಭೆ ಕ್ಷೇತ್ರಕ್ಕೆ 3 ಜನರ ಸಮಿತಿ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ. ವಿಧಾನಸಭಾ ಮಟ್ಟದಲ್ಲಿ ಬಿಎಲ್‍ಎ-1 ಮತ್ತು ಬೂತ್ ಮಟ್ಟದಲ್ಲಿ ಬಿಎಲ್‍ಎ-2 ನೇಮಕ ಮಾಡುತ್ತಿದ್ದೇವೆ ಎಂದರು. ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಾಗಾರ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಬಿಎಲ್‍ಎ-2 ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

    ಜಿಲ್ಲೆಯ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟ ಬಿಎಲ್‍ಒ ಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಮತ್ತು ಅಗತ್ಯಕ್ಕೆ ಅನುಗುಣವಾಗಿ ತಮ್ಮ ದೂರುಗಳನ್ನು ನೋಂದಾಯಿಸಬೇಕು ಎಂದು ಅವರು ತಿಳಿಸಿದರು. ಶಕ್ತಿ ಕೇಂದ್ರ ಮಟ್ಟದಲ್ಲಿ ತಾಂತ್ರಿಕ ಹಿನ್ನೆಲೆ ಹೊಂದಿರುವ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ.

   ಹೊಸ ಮತದಾರರ ನೋಂದಣಿಗೆ ಅರ್ಜಿ ನಮೂನೆ-6, ಸೇರ್ಪಡೆ ಆಗುವ ಹಾಗೂ ತೆಗೆದು ಹಾಕುವ ಕ್ರಿಯೆಗೆ ನಮೂನೆ-7, ವಿಳಾಸ ಬದಲಾವಣೆಗೆ ನಮೂನೆ-8 ಅರ್ಜಿಗಳನ್ನು ಅಗತ್ಯ ಪ್ರಮಾಣದಲ್ಲಿ ಮುದ್ರಿಸಿ ಬೂತ್ ಮಟ್ಟದಲ್ಲಿ ವಿತರಿಸಲಾಗುತ್ತದೆ. ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ಪ್ರಚಾರವನ್ನು ಆಯೋಜಿಸಲಿದ್ದೇವೆ. ಇದಕ್ಕಾಗಿ ನಾವು 7 ದಿನಗಳ ಅಲ್ಪಾವಧಿಯ ವಿಸ್ತಾರಕ್ ಯೋಜನೆಯನ್ನು ಮಾಡಿಸಲಿದ್ದೇವೆ ಎಂದರು.

    ಇದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನಗಳನ್ನು ಆಯೋಜಿಸಲಿದ್ದು, ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳಲಿದ್ದೇವೆ. ಹೊಸ ವಸತಿ ಪ್ರದೇಶಗಳು, ಬಹುಮಹಡಿ ಕಟ್ಟಡಗಳು, ಹಾಸ್ಟೆಲ್‍ಗಳಲ್ಲಿ, ಕಾರ್ಮಿಕ ವಸತಿ ಪ್ರದೇಶಗಳಲ್ಲಿ ವಿಶೇಷ ಅಭಿಯಾನಗಳನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

    ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ನಕಲಿ ಮತದಾರರನ್ನು ತೆಗೆಸುವುದು ಮತ್ತು ವರ್ಗಾವಣೆ ಪ್ರಕ್ರಿಯೆಗೆ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸಾವಿರ, ಅದಕ್ಕಿಂತ ಚಿಕ್ಕ ಕ್ಷೇತ್ರಗಳಲ್ಲಿ 10 ಸಾವಿರ ಮತ್ತು ಸಣ್ಣ ಕ್ಷೇತ್ರಗಳಲ್ಲಿ 5 ಸಾವಿರ ಮತದಾರÀ ಗುರಿಯನ್ನು ನಿಗದಿಪಡಿಸಲಾಗಿದೆ. ಸಂಪೂರ್ಣ ಪ್ರಚಾರದ ಅಭಿಯಾನವನ್ನು ಚುನಾವಣಾ ಆಯೋಗವು ನಿಗದಿ ಪಡಿಸಿದ ದಿನಾಂಕಗಳಿಗೆ ಅನ್ವಯವಾಗುವಂತೆ ಯೋಜಿಸಲಾಗುತ್ತದೆ ಎಂದರು.

   ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು ಮತ್ತು ಪ್ರತೀ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ಮಾಡುವುದು ದೇಶದ ದೊಡ್ಡ ಉತ್ಸವ. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆ ಮತ್ತು ವಿಧಾನಸಭಾ ಮಟ್ಟದಲ್ಲಿ ಸಂಪೂರ್ಣ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

   ಎಲ್ಲಾ ಸಂಸದರು, ಶಾಸಕರು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಪ್ರಚಾರದಲ್ಲಿ ಪರಿಣಾಮಕಾರಿ ಪಾತ್ರ ವಹಿಸಲಿದ್ದಾರೆ. ಮತದಾರರ ಪಟ್ಟಿಯ ತಿದ್ದುಪಡಿ ಮತ್ತು ನೋಂದಣಿಗೆ ವ್ಯಾಪಕವಾದ ಯೋಜನೆ ರೂಪಿಸಬೇಕು ಮತ್ತು ಯೋಜನೆಯ ಪರಿಶೀಲನೆಯನ್ನು ಕಾಲಕಾಲಕ್ಕೆ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಮಾಡಲಿದ್ದೇವೆ ಎಂದು ಹೇಳಿದರು.

   ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ತಂಡ ರಚಿಸಿದ್ದು, ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಪಿ.ರಾಜೀವ್, ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ, ಮುಖಂಡ ಲೋಕೇಶ್ ಬಿಜ್ಜಾವರ ಅವರು ತಂಡದಲ್ಲಿದ್ದಾರೆ ಎಂದು ತಿಳಿಸಿದರು.

    ಬಿಜೆಪಿ ಇಂದು ವಿಶ್ವದ ಅತಿದೊಡ್ಡ ಸೈದ್ಧಾಂತಿಕ ಮತ್ತು ಕಾರ್ಯಕರ್ತ ಆಧಾರಿತ ಸಂಘಟನೆಯಾಗಿದ್ದು, ದೇಶದುದ್ದಗಲಕ್ಕೂ ತನ್ನ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು, ಸರ್ವವ್ಯಾಪಿ ಸರ್ವಸ್ಪರ್ಶಿಯಾಗಿದೆ. ಪಕ್ಷದ ಲಕ್ಷಾಂತರ ಕಾರ್ಯಕರ್ತರು ಸಂಘಟನೆಯ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಕ್ರಿಯರಾಗಿರುವುದು ಅತ್ಯಂತ ಸಂತಸದ ವಿಷಯ. ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕ್ರಿಯಾಶೀಲ ನಾಯಕತ್ವದಲ್ಲಿ ಕೇಂದ್ರ ಸರಕಾರವು ಬಡವರ, ರೈತರ, ಶೋಷಿತರ, ದಲಿತರ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಕಟಿ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಇಡೀ ವಿಶ್ವದಲ್ಲಿ ಮತ್ತೆ ಭಾರತದ ಗತ ವೈಭವವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಸ್ಪಷ್ಟ ಹೆಜ್ಜೆಗಳನ್ನಿಡುತ್ತಿದೆ ಎಂದೂ ಅವರು ವಿವರ ನೀಡಿದರು.

    ಚಂದ್ರಯಾನ 3ರ ಯಶಸ್ವಿಯಿಂದ ನಮ್ಮ ದೇಶದ ಗೌರವ ಹೆಚ್ಚಾಗಿದೆ. ಪ್ರಧಾನಿಯವರು ವಿಜ್ಞಾನಿಗಳನ್ನು ಹುರಿದುಂಬಿಸಿದರು; ಇದರಿಂದ ಗುರಿಯನ್ನು ಬೇಗನೆ ತಲುಪಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ವಿಜ್ಞಾನಿಗಳ ತಂಡ, ಹಣ, ಸಹಕಾರ ನೀಡಿದ ದೇಶದ ಪ್ರಧಾನಿ ಮತ್ತು ಇತರ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ, ಮಾಜಿ ಶಾಸಕ ಮತ್ತು ರಾಜ್ಯ ವಕ್ತಾರ ಪಿ ರಾಜೀವ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಮುಖಂಡ ಲೋಕೇಶ್ ಬಿಜ್ಜಾವರ ಅವರು ಉಪಸ್ಥಿತರಿದ್ದರು.

 

Recent Articles

spot_img

Related Stories

Share via
Copy link
Powered by Social Snap