ಲೋಕಸಭಾ ಚುನಾವಣೆ : ಮತದಾನ ಮಾಡಲು ಶಾಲಾ ಮಕ್ಕಳಿಂದ ಮನವಿ ಪತ್ರ

ಹಾವೇರಿ

          ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಹೆಚ್ಚಳಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿಯ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಸತಿ ಶಾಲಾ ಮಕ್ಕಳು, ವಿದ್ಯಾರ್ಥಿ ನಿಲಯದ ಮಕ್ಕಳಿಂದ ಪಾಲಕರಿಗೆ ಅಂಚೆ ಪತ್ರದ ಮೂಲಕ ಮತದಾನ ಮಾಡಲು ಪಾಲಕರಿಗೆ ಮನವಿ ಮಾಡಿಕೊಳ್ಳುವ ವಿಶಿಷ್ಟ ಕಾರ್ಯಕ್ರಮ ನಡೆಸಲಾಗುತ್ತಿದೆ.

          ಕರ್ಜಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇತ್ತೀಚೆಗೆ ಸಾಮೂಹಿಕವಾಗಿ ತಮ್ಮ ತಮ್ಮ ಪಾಲಕರಿಗೆ ಅಂಚೆ ಪತ್ರ ಬರೆದು ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಭಾಗವಹಿಸಿ ಮತದಾನ ಮಾಡಲು ಮನವಿ ಮಾಡಿಕೊಂಡಿದ್ದಾರೆ.
ಪತ್ರದಲ್ಲಿ ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ತಪ್ಪದೇ ಮತದಾನಮಾಡಿ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಿ. ಒಂದೊಮ್ಮೆ ತಮ್ಮ ಹೆಸರು ಕೈಬಿಟ್ಟು ಹೋಗಿದ್ದರೆ ಈಗಲೇ ನೋಂದಾಯಿಸಿಕೊಳ್ಳಿ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಉದಾಸೀನ ತೋರದೆ ಮತದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

         ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ವಿಗೊಳ್ಳಬೇಕಾದಲ್ಲಿ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ತಮ್ಮ ತಮ್ಮ ಊರಿಗೆ ಹೋದಾಗ ಪಾಲಕರು, ನೆರೆಹೊರೆಯವರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕಡೆಮನಿ, ಪ್ರಾಚಾರ್ಯ ಶಿಡೇನೂರಸ್ವಾಮಿ ಕೆ. ಹಾಗೂ ವಸತಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link