ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸ ಜಲಾಶಯದಿಂದ ಐಮಂಗಲ ಹೋಬಳಿಯ 38 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮಹತ್ತರ ಯೋಜನೆಯ ಕಾಮಗಾರಿ ಶೇ 90 ರಷ್ಟು ಪೂರ್ಣಗೊಂಡಿದ್ದು 2-3 ತಿಂಗಳಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದು ನೀರು ಸರಬರಾಜು ಇಲಾಖೆಯ ಎಂಜಿನಿಯರ್ ರಾಮಚಂದ್ರನಾಯಕ್ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಾಹಿತಿ ನೀಡಿದರು.
ಜಲಾಶಯದ ಮೇಲ್ಭಾಗದಲ್ಲಿ ನೀರು ಪೂರೈಕೆ ಮಾಡುವ ಉದ್ದೇಶದಿಂದ ನಡೆಯುತ್ತಿರುವ ಕಾಮಗಾರಿಯನ್ನು ಈಚೆಗೆ ಅಧಿಕಾರಿಗಳೊಂದಿಗೆ ಶಾಸಕಿ ಪರಿಶೀಲಿಸಿದರು.
ಯಡಿಯೂರಪ್ಪ ಸಿಎಂ ಆಗಿದ್ದಾಗ ಜವನಗೊಂಡನಹಳ್ಳಿ ಮತ್ತು ಐಮಂಗಲ ಹೋಬಳಿಯ ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ಸುಮಾರು ರೂ 80ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ದೊರೆತಿತ್ತು. 2014ರಲ್ಲಿ ತಾಂತ್ರಿಕ ಅನುಮೋದನೆ ದೊರೆತಿದೆ. ಐಮಂಗಳ ಹೋಬಳಿಯಲ್ಲಿ ಒಂದು ಸಾವಿರ ಅಡಿ ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಗ್ರಾಮೀಣ ಪ್ರದೇಶದ ಜನರಿಗೆ ನೀರು ಸಿಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ ಎಂದು ಪೂರ್ಣಿಮಾ ಹೇಳಿದರು.
ರೂ.26.37 ಕೋಟಿ ವೆಚ್ಚದ ಈ ಯೋಜನೆಯಲ್ಲಿ ಕೆಲ ಕಾಮಗಾರಿಗಳು ಬಾಕಿ ಇವೆ. ಎಂದು ರಾಮಚಂದ್ರನಾಯಕ್ ತಿಳಿಸಿದರು.
ರಾಜ್ಯ ಬಿಜೆಪಿ ಹಿಂದುಳಿದ ವಿಭಾಗದ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜೇಶ್ವರಿ, ನಗರಸಭಾಧ್ಯಕ್ಷ ಟಿ.ಚಂದ್ರಶೇಖರ್, ಪೆರಿಸ್ವಾಮಿ, ಹರೀಶ್, ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
