ಕಲಬುರಗಿ:
ಗುಲ್ಬರ್ಗಾದ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಅವರ ಹೆಸರಿಡುವಂತೆ ಬಂಜಾರ ಸಮುದಾಯದವರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕುಮಾರಸ್ವಾಮಿ ಬಂಜಾರ ತಾಂಡಾಗಳಿಗೆ ಭೇಟಿ ನೀಡಿ ರಾಜ್ಯದ 1500 ತಾಂಡಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಲಾಗುವುದು. ಈ ವರ್ಷ 400 ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ ಹಾಗೂ ಪುನಶ್ಚೇತನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ . ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮ ನಡೆಸಿದ ಸಮೀಕ್ಷೆ ಪ್ರಕಾರ ಶೇ.45ರಷ್ಟು ಸೇವಾಲಾಲ್ ಸಾಂಸ್ಕೃತಿಕ ಭವನಗಳು ಶಿಥಿಲಾವಸ್ಥೆಗೆ ತಲುಪಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಸಮೀಕ್ಷೆಯಲ್ಲಿನ ಅಂಶಗಳನ್ನು ಆಧರಿಸಿ, ಕರ್ನಾಟಕದ ಬಂಜಾರ ಜನಾಂಗದಲ್ಲಿ ಪಾರಂಪರಿಕವಾಗಿ ಬಂದಿರುವ ವಿಶಿಷ್ಟವಾದ ಸಂಸ್ಕೃತಿ, ಕಲೆಗಳನ್ನು ಉಳಿಸಿ, ಪ್ರೋತ್ಸಾಹಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಮೂಲಕ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಸಿ ಎಂ ಜತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತಿತ್ತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








