ಹರಿಹರ:
ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಜನರು ಸೊಳ್ಳೆಗಳಿಂದ ಹರಡುವ ಕಾಯಿಲೆಗಳಿಂದ ತಪ್ಪಿಸಿಕೊಳ್ಳಲು ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಡಿ.ಎನ್ ಶಶಿಕಲಾ ಅವರು ಸಲಹೆ ನೀಡಿದರು.
ತಾಲೂಕಿನ ಗಂಗನರಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸೊಳ್ಳೆಗಳ ದಿನಾಚರಣೆ ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಜನರು ಸೊಳ್ಳೆಗಳ ಕಡಿತಕ್ಕೆ ಒಳಗಾಗಿ, ವಿವಿಧ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಈ ಕಾಯಿಲೆಗಳಿಂದ ತಪ್ಪಿಸಿಕೊಳ್ಳಲು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಸಲಹೆ ನೀಡಿದರು.
ಡೆಂಗ್ಯೂ ಜ್ವರವು ಈಡೀಸ್ ಎಂಬ ಸೊಳ್ಳೆಯಿಂದ, ಮಲೇರಿಯಾವು ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯಿಂದ, ಫೈಲೇರಿಯಾ ರೋಗವು ಕ್ಯೂಲೆಕ್ಸ್ ಎಂಬ ಗಂಡು ಜಾತಿಯ ಸೊಳ್ಳೆಯಿಂದಹರಡುತ್ತವೆ. ಈ ಎಲ್ಲಾ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ, ಮನೆಗಳಲ್ಲಿನ ನೀರಿನ ಪರಿಕರಗಳನ್ನು ಮುಚ್ಚುಳದಿಂದ ಮುಚ್ಚಬೇಕು. ಸಾಯಂಕಾಲದ ಸಮಯದಲ್ಲಿ ಮನೆಯ ಒಳಗಡೆ ಬೇವಿನ ಸೊಪ್ಪಿನ ಹೊಗೆಯನ್ನು ಹಾಕಬೇಕು. ಮನೆಯಯಲ್ಲಿ ಸೊಳ್ಳೆಗಳು ಸಾಯುವಂತೆ ಸೊಳ್ಳೆ ನಾಶಕಗಳನ್ನು ಸಿಂಪಡಿಸಬೇಕು ಎಂದು ಮಾರ್ಗದರ್ಶನ ನೀಡಿದರು.
ಕುಟುಂಬದ ಸದಸ್ಯರ ಆರೋಗ್ಯ ರಕ್ಷಣೆಯ ಹಿತದೃಷ್ಠಿಯಿಂದ ಪ್ರತಿಯೊಬ್ಬರ ಮನೆಯಲ್ಲಿ ಸೊಳ್ಳೆ ಪರದೆ ಬಳಸಬೇಕು. ಮನೆಯ ಸುತ್ತಮುತ್ತಲೂ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಮನೆಯ ಅಕ್ಕ ಪಕ್ಕದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳವುದರ ಜೊತೆಯಲ್ಲಿ, ವಿದ್ಯಾರ್ಥಿಗಳು ನಿಮ್ಮ ಮನೆಯ ಹಿರಿಯರಲ್ಲಿ ಸೊಳ್ಳೆಗಳಿಂದಾಗುವು ತೊಂದರೆಗಳ ಬಗ್ಗೆ ಅರಿವು ಮೂಡಿಸಿ. ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚು ಇದೆ. ನಿಮ್ಮನ್ನು ನೋಡಿ ಇತರರು ಪಾಲಿಸಲಿ ಎಂದು ಹೇಳಿದರು.
ಈ ವೇಳೆ ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ಎಂ. ಉಮ್ಮಣ್ಣ ವಿದ್ಯಾರ್ಥಿಗಳಿಗೆ ಸೊಳ್ಳೆಯಿಂದ ಹರಡುವ ಕಾಯಿಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಶಾಲೆಯ ವಿದ್ಯಾರ್ಥಿಗಳಿಗೆ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಪರೀಕ್ಷೆ ನೆಡೆಸಲಾಯಿತು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರಥಮ, ದ್ವಿಥಿಯ ಹಾಗೂ ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ ಧನ ನೀಡಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಮುಖ್ಯಶಿಕ್ಷರು ಹಾಗೂ ಶಿಕ್ಷಕರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








