ಬೆಂಗಳೂರು
ಸರ್ಕಾರಿ ಕನ್ನಡ ಶಾಲೆಗಳನ್ನು ವಿಲೀನದ ಹೆಸರಲ್ಲಿ ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದ ಬಳಿ ಮಂಗಳವಾರ ಬೆಳಿಗ್ಗೆ ಸೇರಿದ ಎಸ್ಎಫ್ಐ, ಎಐಡಿಎಸ್ಒ, ಡಿಎಸ್ಎಫ್, ಕೆವಿಎಸ್ ಹಾಗೂ ಎಆರ್ ಡಿಒ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಬಲಪಡಿಸಲು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ಎಫ್ಐ ರಾಜ್ಯಾಧ್ಯಕ್ಷ ಅಂಬರೀಶ್, ಸರ್ಕಾರ, ಶಿಕ್ಷಣ ಸಚಿವ ಹಾಗೂ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಶಾಲೆಗಳನ್ನು ಮುಚ್ಚುವ , ವಿಕೀನಗೊಳಿಸುವ ಆದೇಶವನ್ನು ಈ ಕೂಡಲೇ ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಯಾವ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಅತಿ ಕಡಿಮೆ ಇದಿಯೋ, ಅವುಗಳ ಪರಿಸ್ಥಿತಿ ಏಕೆ ಹಾಗಾಗಿದೆ ಎಂಬ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲು, ಅದನ್ನು ಸುಧಾರಿಸಬಹುದಾದ ಕ್ರಮಗಳನ್ನು ಶಿಫಾರಸು ಮಾಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ತ್ವರಿತವಾಗಿ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳ ಪ್ರಗತಿಗೆ ಪೂರಕವಾಗಿರುವ ಕೆಲಸಗಳನ್ನು ಮಾಡಬೇಕು.ಶಿಕ್ಷಕರ ನೇಮಕಾತಿ ಮುಂದಾಗಬೇಕು.ಆಂಗ್ಲ ಕಲಿಕೆ, ಪೌಷ್ಟಿಕ ಆಹಾರ ನೀಡಬೇಕು ಎಂದ ಅವರು, 14ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಮುಚ್ಚುವ ಆದೇಶ ರದ್ದುಗೊಳಿಸಿ, ಸಾರ್ವಜನಿಕರ ಪ್ರಕಟಣೆ ಹೊರಡಿಸಬೇಕು ಎಂದು ಒತ್ತಾಯ ಮಾಡಿದರು.
