ಬೆಂಗಳೂರು:
ನಗರದಲ್ಲಿ ವ್ಯವಸ್ಥಿತವಾಗಿ ಜಾಹೀರಾತು ಪ್ರದರ್ಶನಕ್ಕೆಂದೇ ನೂತನ ‘ಜಾಹೀರಾತು ಪಾಲಿಸಿ’ ತರಲು ಚಿಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ಕಾರ್ಡ್ ರಸ್ತೆ ಮಂಜುನಾಥ ನಗರದಲ್ಲಿ ಸೋಮವಾರ ನೂತನ ಮೆಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಕೆಲ ಜಾಹೀರಾತುದಾರರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ಜಾಹೀರಾತು ನೀತಿ ಜಾರಿಗೆ ತರಲಾಗುವುದು ಎಂದರು.
ಬಿಬಿಎಂಪಿ ಟೆಂಡರ್ ಕರೆಯುವ ಸಂದರ್ಭದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅವಧಿ ನಿಗದಿ ಮಾಡಿದರೂ ಅವಧಿಯೊಳಗೇ ಕಾಮಗಾರಿ ಮುಗಿಯುತ್ತಿಲ್ಲ. ಇದರಿಂದ ಹೆಚ್ಚುವರಿ ಹಣ ವೆಚ್ಚವಾಗುತ್ತಿದೆ. ಹೀಗಾಗಿ ಗುತ್ತಿಗೆದಾರರಿಗೆ ಸಮಯದ ಬಗ್ಗೆ ಎಚ್ಚರಿಕೆ ನೀಡಿ. ದಂಡ ಹಾಕುವ ಅವಕಾಶವೂ ಇದೆ. ಅದನ್ನು ಬಿಬಿಎಂಪಿ ಬಳಸಬಹುದು ಎಂದರು.
ಕಳೆದ ಐದು ವರ್ಷದಲ್ಲಿ ಬಿಬಿಎಂಪಿಗೆ 15 ಸಾವಿರ ಕೋಟಿ ರೂ ಅನುದಾನವನ್ನು ಸರಕಾರದಿಂದ ನೀಡಲಾಗಿದೆ. ಆದರೂ ಸಾಕಷ್ಟು ಮೇಲ್ಸೇತುವೆ, ಕೆಳಸೇತುವೆಗಳು ಆಗಬೇಕಿದೆ. ಬಿಬಿಎಂಪಿ ವೇಗವಾಗಿಯೇ ಸಾಕಷ್ಟು ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಕಸ ನಿರ್ವಹಣೆ, ಅನಧಿಕೃತ ಕೇಬಲ್ ಅಳವಡಿಕೆಯಲ್ಲು ಸಾಕಷ್ಟು ಕ್ರಮ ಕೈಗೊಂಡಿದ್ದೇವೆ. 8 ಸಾವಿರ ಕಿ.ಮೀ. ಅನಧಿಕೃತ ಕೇಬಲ್ ತೆರವು ಗೊಳಿಸಿದ್ದೇವೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಮೇಯರ್ ಸಂಪತ್ ರಾಜ್, ಶಾಸಕ ಸುರೇಶ್ ಕುಮಾರ್, ಆಯುಕ್ತ ಮಂಜುನಾಥ್ ಪ್ರಸಾದ್ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








