ಶಿಮ್ಲಾ
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇದೆ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಬುಧವಾರ ಅಮಾನತುಗೊಳಿಸಿದ್ದಾರೆ.
ಇತರ 14 ಬಿಜೆಪಿ ಶಾಸಕರಲ್ಲಿ ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಾನ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್ ಮತ್ತು ಇಂದರ್ ಸಿಂಗ್ ಗಾಂಧಿ ಸೇರಿದ್ದಾರೆ.
‘ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂದು ನಾವು ಆತಂಕಗೊಂಡಿದ್ದೇವೆ’ ಎಂದು ಜೈರಾಮ್ ಠಾಕೂರ್ ಬೆಳಗ್ಗೆ ಸುದ್ದಿಗಾರರಿಗೆ ತಿಳಿಸಿದರು. ಇದರ ಬೆನ್ನಲ್ಲೇ ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ.
ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯು ಕಾಂಗ್ರೆಸ್ ಸರ್ಕಾರ ಅಲ್ಪಮತದಲ್ಲಿದೆ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು.
ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರ ಅಡ್ಡ ಮತದಾನದ ಕಾರಣದಿಂದ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನವನ್ನು ಮಂಗಳವಾರ ಬಿಜೆಪಿ ಗೆದ್ದು ಬೀಗಿದೆ. ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಕಾಂಗ್ರೆಸ್ ಧೀಮಂತ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ.
ಇನ್ನು, ಹಿಮಾಚಲ ಪ್ರದೇಶದಲ್ಲಿನ ತನ್ನ ಶಾಸಕರ ಬಂಡಾಯವನ್ನು ಶಮನಗೊಳಿಸಲು ಈಗಾಗಲೇ ಹರಸಾಹಸ ಪಡುತ್ತಿರುವ ಕಾಂಗ್ರೆಸ್ಗೆ ಮತ್ತೊಂದು ಹೊಡೆತ ಬಿದ್ದಿದ್ದು, ಪ್ರಬಲ ಸಚಿವ ವಿಕ್ರಮಾದಿತ್ಯ ಸಿಂಗ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2024/02/shimla-assembly-bjp.gif)