ದೆಹಲಿ:
ರಾಷ್ಟ್ರೀಯ ಸ್ಮೃತಿ ಸ್ಥಳ ತಲುಪಿದ ವಾಜಪೇಯಿ ಪಾರ್ಥೀವ ಶರೀರ. ಒಟ್ಟು 15 ಕಿ.ಮೀ. ಸಾಗಿದ ಮೆರವಣಿಗೆ. ಮಾಜಿ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕದ ನಡುವೆ ಸ್ಮೃತಿ ಸ್ಥಳವಿದೆ.
ದೇಶ ಕಂಡ ಅಪರೂಪದ ರಾಜಕಾರಣಿ, ಭಾರತದ ರತ್ನ,ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಂತ್ಯಕ್ರಿಯೆ ವಿಧಿ ವಿಧಾನ ಬ್ರಾಹ್ಮಣ ಸಂಪ್ರದಾಯದಂತೆ ಆರಂಭವಾಗಿದೆ.
ಬಿಜೆಪಿ ಕಚೇರಿಯಿಂದ ಸ್ಮೃತಿ ಸ್ಥಳಕ್ಕೆ ಪಾರ್ಥಿವ ಶರೀರವನ್ನು ತಂದ ಬಳಿಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಸಶಸ್ತ್ರ ಪಡೆಯ ಮೂರು ವಿಭಾಗಗಳಿಂದ ಗೌರವ ಸಲ್ಲಿಸಲಾಯಿತು. ಕೆಲವು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.
ನಮಿತಾ ಕೌಲ್ ಭಟ್ಟಾಚಾರ್ಯ ಅವರನ್ನು ವಾಜಪೇಯಿ ದತ್ತು ಪಡೆದಿದ್ದರು. ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ದೇಶದೆಲ್ಲೆಡೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವಾರು ಗಣ್ಯರು ಸ್ಮೃತಿ ಸ್ಥಳದಲ್ಲಿ ಅಟಲ್ ಬಿಹಾರಿ ವಾಜಪೇಯಿಗೆ ಪುಷ್ಪ ನಮನ ಸಲ್ಲಿಸಿದರು.
