ತುಮಕೂರು:
ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದು ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರಲಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಹೇಳಿದೆ. ಅದರಂತೆ ಸುಮ್ಮನಿದ್ದೆ. ಈಗ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. ಮೂರು ಡಿಸಿಎಂ ಹುದ್ದೆಗಳನ್ನು ಮಾಡಬೇಕು ಎಂದು ತಿಳಿಸಿದರು.
ಸರ್ವರಿಗೂ ಸಮಪಾಲು ಸಮಬಾಳು ಅನ್ನೋದು ಕೇವಲ ಸಂಪತ್ತಿಗೆ ಮಾತ್ರ ಅಲ್ಲ. ಅವಕಾಶಗಳಿಗೂ ಕೂಡ ಹಂಚಿಕೆ ಆಗಬೇಕು. ಕಾಂಗ್ರೆಸ್ ಪರ ಯಾವ ಯಾವ ಸಮುದಾಯಗಳು ಇವೆ ಅವರನ್ನು ಡಿಸಿಎಂ ಮಾಡಬೇಕು ಎಂದು ಪುನರುಚ್ಚರಿಸಿದರು.
![](https://prajapragathi.com/wp-content/uploads/2023/09/k-n-rajanna.gif)