ಬೆಂಗಳೂರು:
77ನೇ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವಜಾರೋಹಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಪಥ ಸಂಚಲನದಲ್ಲಿ ಕೆಎಸ್ಆರ್ಪಿ, ಸಿಆರ್ಪಿಎಫ್, ಬಿಎಸ್ಎಫ್, ಸಂಚಾರಿ ಪೊಲೀಸರು, ಮಹಿಳಾ ಪೊಲೀಸರು, ಹೋಂ ಗಾರ್ಡ್ಗಳು, ಅಗ್ನಿಶಾಮಕ ಸಿಬ್ಬಂದಿ, ಸ್ಕ್ವಾ ಡ್ ಮತ್ತು ಬ್ಯಾಂಡ್ನ ಒಟ್ಟು 38 ತುಕಡಿಗಳ ಸುಮಾರು 1 ಸಾವಿರದ 350 ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದರು.
ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳ ವೀರ ನಮನ ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ 700 ಕಾಲೇಜು ವಿದ್ಯಾರ್ಥಿಗಳಿಂದ ವೀರ ಭೂಮಿ ವಿದುರಾಶ್ವತ್ಥ ಧ್ವಜ ಸತ್ಯಾಗ್ರಹ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ ರೋಪ್ ಸ್ಕಿಪ್ಪಿಂಗ್ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮಾತನಾಡಿ, ಸಮಾರಂಭಕ್ಕಾಗಿ 8 ಸಾವಿರ ಪಾಸ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದಕ್ಕಾಗಿ 1 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೈದಾನದ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆಎಸ್ಆರ್ಪಿ, ಸಿಎಆರ್ ತುಕಡಿಗಳು, ಎರಡು ಅಗ್ನಿಶಾಮಕ ವಾಹನಗಳು, ಎರಡು ಆಂಬ್ಯುಲೆನ್ಸ್ಗಳನ್ನು ಕಾಯ್ದಿಸಲಾಗಿದೆ.
ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಟಿ.ವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/08/bbmp.jpg)