ಬೆಂಗಳೂರು:
ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ವಾಹನಗಳನ್ನು ನಿಲ್ಲಿಸಿದ ಹಿನ್ನೆಲೆಯಲ್ಲಿ 8,811 ಪ್ರಕರಣಗಳು ದಾಖಲಿಸಲಾಗಿವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.ವಿಧಾನ ಪರಿಷತ್ ನಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಎಸ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿಯೇತರ ಬಸ್ಗಳನ್ನು ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಆಗಲಿದ್ದು, ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಿದೆ ಎಂದು ಹೇಳಿದರು.
ಇದೇ ವೇಳೆ ಸಂಚಾರ ಪೊಲೀಸರು ಮತ್ತು ಬಿಎಂಟಿಸಿಯ ಸಾರಥಿ ಗಸ್ತು ವಾಹನಗಳು ದಾಖಲಿಸಿದ ಪ್ರಕರಣಗಳ ಸಂಖ್ಯೆಯನ್ನು ಪಟ್ಟಿ ಮಾಡಿದ ಗೃಹ ಸಚಿವರು, 2022, 2023 ಮತ್ತು 2024 ರಲ್ಲಿ ಕ್ರಮವಾಗಿ 8,870, 5,499 ಮತ್ತು 8,811 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ವರ್ಷ ಇಲ್ಲಿಯವರೆಗೆ 943 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದಲ್ಲದೆ, ಬಿಎಂಟಿಸಿ ಬಸ್ ಚಾಲಕರು ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್ಗಳನ್ನು ನಿಲ್ಲಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಅವರಿಗೆ ರಸ್ತೆ ಸುರಕ್ಷತೆಯ ಕುರಿತು ತರಬೇತಿಯನ್ನೂ ಕೂಡ ಸಹ ನೀಡಲಾಗಿದೆ ಎಂದು ಹೇಳಿದರು.
2023 ಮತ್ತು 2024 ರಲ್ಲಿ 1,850 ಮತ್ತು 9,619 ಚಾಲಕರಿಗೆ ತರಬೇತಿ ನೀಡಲಾಗಿದ್ದರೆ, 2025 ರಲ್ಲಿ 377 ಚಾಲಕರಿಗೆ ತರಬೇತಿ ನೀಡಲಾಗಿದೆ. ಇದಲ್ಲದೆ, ಅಗತ್ಯ ಸ್ಥಳಗಳಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
