ಬೆಂಗಳೂರು
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಬಳಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.
ಸಭೆಯಲ್ಲಿ ಆಡಳಿತ ಪಕ್ಷದ ನಾಯಕರು, ಆಯುಕ್ತರು, ವಿಶೇಷ ಆಯುಕ್ತರು (ಘನತ್ಯಾಜ್ಯ ಮತ್ತು ಆಡಳಿತ), ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್, ವಲಯಗಳ ಜಂಟಿ ಆಯುಕ್ತರು, ಪಾಲಿಕೆ ಆರೋಗ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.
ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಗಣೇಶ ಮೂರ್ತಿಗಳನ್ನು ಮಾರಾಟ, ತಯಾರಿಸುವ ಹಾಗೂ ಗೋಡನ್ಗಳಲ್ಲಿ ಸಂಗ್ರಹಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಯಾವುದೇ ಮುಲಾಜಿಲ್ಲದೆ ಜಪ್ತಿ ಮಾಡಿ ದಂಡ ವಿಧಿಸಬೇಕು. ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಎಲ್ಲಾ ವಲಯ ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಕಾರಿಗಳಿಗೆ ಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು, ಗಣೇಶ ಚಥುರ್ತಿಯ ದಿನದಂದು ಪಿಒಪಿ ಹಾಗೂ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಆದರೂ ನಗರದಲ್ಲಿ ಅಂತಹ ಗಣೇಶ ಮೂರ್ತಿಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಅದಕ್ಕೆ ಕೂಡಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಪಿಒಪಿ ಗಣೇಶ ಮೂರ್ತಿಗಳನ್ನು ಕೂರಿಸಲು ಹಾಗೂ ಕೆರೆಗಳಲ್ಲಿ ವಿಸರ್ಜನೆ ಮಾಡಲು ಅನುಮತಿ ಕೊಡಬಾರದು. ನಗರದಲ್ಲಿ ತಯಾರಿ, ಮಾರಾಟ, ಸಂಗ್ರಹಸಿಟ್ಟಿರುವ ಗೋಡನ್ಗಳಿಗೆ ಭೇಟಿ ನೀಡಿ ಎಲ್ಲಾ ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿ ಪಾಲಿಕೆ ನಿಗದಿಪಡಿಸಿರುವ ಸ್ಥಳಕ್ಕೆ ಕೊಂಡೊಯ್ಯಬೇಕು. ಅದಕ್ಕೆ ಬೇಕಾದ ವಾಹನ ವ್ಯವಸ್ಥೆಯನ್ನು ಪಾಲಿಕೆಯಿಂದಲೇ ಕಲ್ಪಿಸಲಾಗುವುದು. ಜಪ್ತಿ ಮಾಡುವ ವೇಳೆ ಪೊಲೀಸ್ ಭದ್ರತೆ ಕಲ್ಪಿಸಲು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗುವುದು ಎಂದರು.
ನಗರಕ್ಕೆ ಹೊರರಾಜ್ಯ, ನಗರಗಳಿಂದ ಪಿಒಪಿ ಗಣೇಶ ಮೂರ್ತಿಗಳು ಬರದಿರಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ, ಪೊಲೀಸ್ ಸಿಬ್ಬಂದಿಗಳನ್ನು ಚೆಕ್ಪೋಸ್ಟ್ಗಳಲ್ಲಿ ನಿಯೋಜನೆ ಮಾಡುವಂತೆಯೂ ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು. ಈ ಬಾರಿ ನಗರದಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ಹಾಗಿಲ್ಲ. ಪಾದಾಚಾರಿ ಮಾರ್ಗದಲ್ಲಿ ಗಣೇಶ ಮೂರ್ತಿಗಳನ್ನಿಟ್ಟು ಮಾರಾಟ ಮಾಡಲು ಅನುಮತಿ ಕೊಡಬೇಡಿ. ಗಣೇಶ ಮೂರ್ತಿ ತಯಾರಿಸಲು ಪರವಾನಗಿ ನೀಡಕೂಡದು. ಜೊತೆಗೆ ಪಿಒಪಿ ಗಣೇಶ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಬಾರದು ಎಂದು ಹೇಳಿದರು.
ಏಕಗವಾಕ್ಷಿ ಪದ್ಧತಿ:
ಕಳೆದ ವರ್ಷದಂತೆ ಈ ಬಾರಿಯೂ ಕೂಡ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆಯಿಂದ ಏಕಗವಾಕ್ಷಿ ಪದ್ಧತಿಯಲ್ಲೇ ಗಣೇಶ ಮೂರ್ತಿಗಳನ್ನು ಕೂರಿಸಲು ಅನುವು ಮಾಡಿ ಕೊಡಲಾಗುವುದು. ಪಾಲಿಕೆ ವ್ಯಾಪ್ತಿಯಲ್ಲಿ ಕೂರಿಸುವ ಗಣೇಶ ಮೂರ್ತಿಗಳಿಗೆ ನೆಲ ಬಾಡಿಗೆಯನ್ನು ಸಂಗ್ರಹಿಸುವುದಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು.
ತಾತ್ಕಾಲಿಕ ಹೊಂಡಗಳ ನಿರ್ಮಾಣ: ನಗರದಲ್ಲಿರುವ ಪ್ರಮುಖ ಕೆರೆಗಳ ಬಳಿ ತಾತ್ಕಾಲಿಕ ಹೊಂಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆ ಸ್ಥಳಗಳಲ್ಲಿ ಬ್ಯಾರಿಕೇಡ್, ವಿದ್ಯುತ್ ದೀಪಗಳ ಅಳವಡಿಕೆ, ಸಿಸಿ ಕ್ಯಾಮೆರಾ ಅಳವಡಿಕೆ ಮಾಡಬೇಕು. ಸಂಚಾರಿ ವಿಸರ್ಜನಾ ತೊಟ್ಟಿಗಳನ್ನು ಎಲ್ಲೆಲ್ಲಿ ನಿರ್ಮಾಣ ಮಾಡಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.
ಮೇಯರ್ ಗಂಗಾಂಬಿಕೆ ಮಾತನಾಡಿ, ಪಿಒಪಿ ಗಣೇಶ ಮೂರ್ತಿಗಳನ್ನು ಕೂರಿಸಬಾರದೆಂದು ಹೈಕೋರ್ಟ್ ಆದೇಶವಿದೆ. ಈ ಪೈಕಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಾರಿಮಾಡಿರುವ ಅಧಿಸೂಚನೆಯಂತೆ ಎಲ್ಲಾ ಪಾಲಿಕೆ ಆರೋಗ್ಯಾಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








