ನವದೆಹಲಿ
ಕಾಶ್ಮೀರದಲ್ಲಿ ರಾಜಕೀಯ ನಾಯಕರನ್ನು ಬಂಧಿಸಿರುವುದು ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ನಾಯಕರನ್ನು ರಹಸ್ಯ ಸ್ಥಳಗಳಲ್ಲಿ ಬಂಧಿಸಿಡಲಾಗಿದೆ. ಇದು ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.ಕೇಂದ್ರ ಸರ್ಕಾರ ಸೃಷ್ಟಿಸಿರುವ ನಾಯಕನಿಲ್ಲದ ಕಾಶ್ಮೀರವನ್ನು ಭಯೋತ್ಪಾದಕರು ಭರ್ತಿ ಮಾಡುತ್ತಾರೆ. ಇದು ಅಲ್ಪ ದೃಷ್ಟಿ ಮತ್ತು ಮೂರ್ಖತನದ ನಡೆ.
ಭಯೋತ್ಪಾದಕರಿಗೆ ಖಾಲಿಯಿರುವ ನಾಯಕತ್ವ ತುಂಬಲು ಅನುವು ಮಾಡಿಕೊಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸಿದ ಅವರು, ಈ ಅಧಿಕಾರದ ದುರುಪಯೋಗವು ನಮ್ಮ ರಾಷ್ಟ್ರೀಯ ಭದ್ರತೆ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದಿದ್ದಾರೆ.
ರಾಜ್ಯವನ್ನು ಏಕಪಕ್ಷೀಯವಾಗಿ ವಿಭಜಿಸುವುದು, ಚುನಾಯಿತ ಪ್ರತಿನಿಧಿಗಳನ್ನು ಗೃಹಬಂಧನದಲ್ಲಿರಿಸುವುದರ ಮೂಲಕ ಕೇಂದ್ರ ಸರ್ಕಾರ ದೇಶದ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ವಾಗ್ದಾಳಿ ನಡೆಸಿದರು.ವರದಿಗಳ ಪ್ರಕಾರ, ನ್ಯಾಷನಲ್ ಕಾನ್ಫೇರೆನ್ಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಇತರ ಅನೇಕ ಮುಖ್ಯವಾಹಿನಿಯ ರಾಜಕೀಯ ಮುಖಂಡರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








