ತುಮಕೂರು
ಗ್ರಾಮೀಣ ಪ್ರದೇಶದ ಜನರಿಗೆ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು .ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ “ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ-2019” ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕುಷ್ಠರೋಗ ಕುರಿತಂತೆ ಆಶಾ ಕಾರ್ಯಕರ್ತೆ ಯರು ಮನೆ ಮನೆಗೆ ತೆರಳಿ ರೋಗದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.
ಪಾವಗಡ ಹಾಗೂ ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಕುಷ್ಠರೋಗ ಪ್ರಕರಣಗಳು ಕಂಡು ಬಂದಿದ್ದು, ರೋಗಿಗಳ ಮನವೊಲಿಸಿ ಚಿಕಿತ್ಸೆ ಪಡೆಯುವಂತೆ ಪ್ರಯತ್ನಿಸಬೇಕು ಅಲ್ಲದೇ ಪೋಸ್ಟರ್ಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಈ ಅಭಿಯಾನ ಕಾರ್ಯಕ್ರಮದಲ್ಲಿ ಬಳಸಿಕೊಂಡು ಸಾರ್ವಜನಿಕರ ಜೊತೆ ಸಂವಹನ ನಡೆಸುವುದರ ಬಗ್ಗೆ ತರಬೇತಿ ನೀಡಬೇಕು. ಅಲ್ಲದೇ ಅವರು ಪ್ರತಿದಿನ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಮನೆ ಮನೆಗೆ ತೆರಳಿ ಮಾಹಿತಿ ನೀಡುತ್ತಿರುವ ಬಗ್ಗೆ ರಿಜಿಸ್ಟ್ರರ್ ನಿರ್ವಹಣೆ ಮಾಡಬೇಕು ಈ ಎಲ್ಲಾ ಕಾರ್ಯಚಟುವಟಿಕೆಗಳನ್ನು ಆಯಾ ತಾಲೂಕು ನೋಡಲ್ ಅಧಿಕಾರಿಗಳು ಪರಿಶೀಲಿಸಬೇಕು. ರೋಗ ಪತ್ತೆಯಾಗುವ ಸ್ಲಂ ವಾರ್ಡ್ಗಳಲ್ಲಿ ಸಮೀಕ್ಷೆ ನಡೆಸಿ ಪತ್ತೆಯಾದ ವಾರ್ಡ್/ಏರಿಯಾಗಳಲ್ಲಿ ಜಾಗೃತಿ ಮೂಡಿಸಿ ಚಿಕಿತ್ಸೆ ಪಡೆಯುವಂತೆ ಮಾಡಬೇಕು ಎಂದು ಅವರು ತಿಳಿಸಿದರು.
ಕುಷ್ಠರೋಗಗಳಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ/ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪತ್ತೆ ಹಚ್ಚುವ ಕುಷ್ಠರೋಗದ ಪ್ರಕರಣಗಳಿಗೆ ಪಿ.ಬಿ.ಗುಂಪಿಗೆ 250 ರೂ., ಎಂ.ಬಿ ಗುಂಪಿಗೆ 250 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅಂಗವಿಕಲತೆ ಪುನರ್ ಸರಿಪಡಿಸುವ ಶಸ್ತ್ರ ಚಿಕಿತ್ಸೆ ಸೌಲಭ್ಯವನ್ನು ಕಲ್ಪಿಸ ಲಾಗುತ್ತಿದ್ದು, ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಸರ್ಕಾರದಿಂದ 8000 ರೂ.ಗಳ ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ|| ಚೇತನ್ ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸೆಪ್ಟಂಬರ್ 5ರಿಂದ 23ರವರೆಗೆ ನಡೆಯುವ “ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ”ಕಾರ್ಯಕ್ರಮದ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ, ಜಿಲ್ಲಾ ಚಿಕಿತ್ಸಕ ಡಾ|| ವೀರಭದ್ರಯ್ಯ, ಆರ್ಸಿಹೆಚ್ ಅಧಿಕಾರಿ ಡಾ|| ಕೇಶವ್ರಾಜ್, ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ|| ಮೋಹನ್ದಾಸ್, ಜಿಲ್ಲಾ ನ್ಯೂಕ್ಲಿಯಸ್ ತಂಡದ ನಾಗರಾಜು ಜಿ. ಸತೀಶ್ಬಾಬು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
