ಪ್ಲಾಸ್ಟಿಕ್ ನಿಷೇಧ: ಜನಾಂದೋಲನದಲ್ಲಿ ಸ್ವಯಂಪ್ರೇರಿತ ಭಾಗವಹಿಸುವಿಕೆ ಅಗತ್ಯ..!

ತುಮಕೂರು

    ಪ್ರತಿಯೊಬ್ಬರೂ ಸ್ವಜಾಗೃತಿಯಿಂದ ಸ್ವಯಂಪ್ರೇರಿತರಾಗಿ ಪ್ಲಾಸ್ಟಿಕ್ ನಿಷೇಧ ಕುರಿತು ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅಗತ್ಯ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದರು.

   ಬರುವ ಅಕ್ಟೋಬರ್ 2ರಂದು ಮಹಾತ್ಮಾಗಾಂಧಿಯವರ 150ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ ನಿಷೇಧದ ಬಗ್ಗೆ ಇಂದಿನಿಂದ ಅಕ್ಟೋಬರ್ 1 ರವರೆಗೆ ಹಮ್ಮಿಕೊಂಡಿರುವ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ಲಾಸ್ಟಿಕ್‍ನಿಂದ ಅನಾಹುತಗಳು ಹೆಚ್ಚುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬಿದ್ದ ಮಳೆ ನೀರು ಕೆರೆ-ಕಟ್ಟೆಗಳಿಗೆ ಸರಾಗವಾಗಿ ಹೋಗಲು ಪ್ಲಾಸ್ಟಿಕ್‍ನಿಂದ ಅಡಚಣೆಯಾಗಿದೆ. ಹರಿಯುವ ನೀರಿನ ಜೊತೆಗೆ ಪ್ಲಾಸ್ಟಿಕ್ ಕೂಡ ಸೇರುತ್ತಿರುವುದರಿಂದ ಜಲಮಾಲಿನ್ಯ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲರೂ ಕೈಜೋಡಿಸಿ ಈ ಜನಾಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

    ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ಮಾತನಾಡಿ ಬಾಪೂಜಿಯವರ 150ನೇ ಜಯಂತಿ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜನಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ಜನಾಂದೋಲನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು, ಮಕ್ಕಳು ಹಾಗೂ ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಬಳಸದಿರುವ ಕುರಿತು ಒಬ್ಬರಿಂದ ಒಬ್ಬರಿಗೆ ಮಾಹಿತಿ ರವಾನಿಸಿ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

    ಪಾಲಿಕೆ ಮೇಯರ್ ಲಲಿತಾ ರವೀಶ್ ಮಾತನಾಡಿ, ಪ್ಲಾಸ್ಟಿಕ್ ತಯಾರಿಕೆಯನ್ನೇ ರದ್ದುಗೊಳಿಸಿದಲ್ಲಿ ಪ್ಲಾಸ್ಟಿಕ್ ನಿಷೇಧ ಸಾಧ್ಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಜನ ಜಾಗೃತಿ ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಉಪಮೇಯರ್ ರೂಪಶ್ರೀ, ಪಾಲಿಕೆಯ ಆರೋಗ್ಯಾಧಿಕಾರಿ ಡಾ|| ನಾಗೇಶ್, , ಟೂಡಾ ಆಯುಕ್ತ ಯೋಗಾನಂದ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

    ನಗರದ ಎಂಪ್ರೆಸ್ ಕಾಲೇಜಿನ ವಿದ್ಯಾರ್ಥಿನಿಯರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಟೌನ್‍ಹಾಲ್‍ನಿಂದ ಆರಂಭವಾದ ಜಾಥಾ ಎಂಜಿ ರಸ್ತೆ-ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸಾಗಿ ಟೌನ್‍ಹಾಲ್ ಸರ್ಕಲ್ ಬಳಿ ಕೊನೆಗೊಂಡಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link