ಬೆಂಗಳೂರು
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ನೂರಾರು ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.
ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಬೆಳಿಗ್ಗೆ ಸೇರಿದ ನೂರಾರು ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಕಟದ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಾಗ ಮಾರ್ಗ ಮಧ್ಯೆ ಪೊಲೀಸರು ಬಂಧಿಸಿ ಸಂಜೆ ಬಿಡುಗಡೆಗೊಳಿಸಿದರು..
ಮುತ್ತಿಗೆ ಹೊರಡುವ ಮುನ್ನ ಸೇರಿದ ಪ್ರತಿಭಟನೆಯನ್ನು ದ್ದೇಶಿಸಿ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ ಮಾತನಾಡಿ, ನೆತೆ ಸಂತ್ರಸ್ತರಿಗಾಗಿ ನಾವು ಹಲವು ಬಾರಿ ಹೋರಾಟ ಮಾಡಿದರೂ, ಯಡಿಯೂರಪ್ಪ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.ಹಾಗಾಗಿಯೇ ನಾವು ರಾಜಭವನ ಮುತ್ತಿಗೆಗೆ ಮುಂದಾಗಿದ್ದೇವೆ. ಸರ್ಕಾರಕ್ಕೆ ಕಣ್ಣು, ಕಿವಿ ಇದ್ದರೆ ಜನರಿಗಾಗಿ ಕೆಲಸ ಮಾಡಲಿ ಎಂದರು.
ಭಿಕ್ಷೆ ಬೇಕಿಲ್ಲ
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಭಿಕ್ಷೆ ನೀಡುವ ಅಗತ್ಯ ಇಲ್ಲ. ನಾವು ಪಾವತಿ ಮಾಡಿರುವ ಕೋಟ್ಯಂತರ ರೂಪಾಯಿ ತೆರಿಗೆಯಲ್ಲಿಯೇ ನಮಗೆ ಅಧಿಕ ಪರಿಹಾರ ನೀಡಬೇಕು.ಇಲ್ಲದಿದ್ದಲ್ಲಿ ನಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಆರ್ಶದ್ ಹೇಳಿದರು.
ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ರಾಜ್ಯದಲ್ಲಿ ಸಂಕಷ್ಟ ಎದುರಾಗಿದೆ. ಕನ್ನಡಿಗರು ಇಂತಹ ಒಂದು ಕರಾಳ ದಿನಗಳನ್ನು ಅನುಭವಿಸುತ್ತಿದ್ದಾರೆ. ಒಂದು ಕಡೆ ಬರ ಮತ್ತೊಂದು ಕಡೆ ಪ್ರವಾಹದ ಚಾಯೆ ಎದುರಾಗಿದೆ. ಇದನ್ನು ನೆನಸಿಕೊಂಡರೆ ಬಹಳ ನೋವಾಗುತ್ತದೆ. ಆದರೆ, ದೇಶದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಕಣ್ಣಿದೆಯಾ, ಕಿವಿಯೂ ಇಲ್ಲ. ಗೊಳು ಕೇಳಲು ಯಾರೂ ಇಲ್ಲ. ಕರುಣೆ ಇಲ್ಲವೇ ಎಂದು ಎಲ್ಲರಿಗೂ ಪ್ರಶ್ನೆ ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕದ ಅರ್ಧ ರಾಜ್ಯ ಮುಳುಗಡೆಯಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಮತ್ತೆ ಪ್ರವಾಹ ಸುರುವಾಗಿದೆ. ಇದಕ್ಕೆ ಯಾರು ಹೊಣೆ. ನ್ಯಾಯ ಕೊಡುವವರು ಯಾರು ಎಂದು ಇವತ್ತು ನಾವು ಕೇಳುತ್ತಿದ್ದೇವೆ ಎಂದ ಅವರು, ಹೆಣ್ಣುಮಕ್ಕಳ, ಮಕ್ಕಳ ಸ್ಥಿತಿ ನೋಡಿದರೆ ನಿಜಕ್ಕೂ ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ. ಬಿಜೆಪಿ ಮಲತಾಯಿ ದೋರಣೆ ಅನುಸರಿಸುತ್ತಿದೆ. ಮೋದಿ ಅವರು ಕರ್ನಾಟಕದ ಬಗ್ಗೆ ಕಿಂಚಿತ್ತೂ ನೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಂಸದ ಉಗ್ರಪ್ಪ, ಕಾಂಗ್ರೆಸ್ ಮುಖಂಡಸಲೀಂ ಅಹ್ಮದ್, ಸಂದೀಲ್ ಸೂರಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
