ಬೆಂಗಳೂರು
ಹೆಚ್ಚುತ್ತಿರುವ ಮಾನವ ಕಳ್ಳ ಸಾಗಣೆ ಮಕ್ಕಳ ಮಾರಾಟವನ್ನು ತಡೆಗಟ್ಟಿ ಕ್ರಮ ಕೈಗೊಳ್ಳಲು ನುರಿತ ವಿಶೇಷ ಪ್ರತಿನಿಧಿಗಳನ್ನು ನಿಯೋಜಿಸುವ ಅವಶ್ಯಕತೆ ಇದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಹಾಗೂ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ರೂಪ ಕುಮಾರ್ ದತ್ತ ಹೇಳಿದರು.
ಬಡತನ ಪ್ರಮಾಣ ಹೆಚ್ಚಿರುವುದರಿಂದ ಚಿಕ್ಕ ಮಕ್ಕಳ ಮಾರಾಟ, ಸಾಗಾಣಿಕೆ ಹಾಗೂ ಹೆಣ್ಣು ಮಕ್ಕಳನ್ನು ಮಾರುಕಟ್ಟೆಯ ಉದ್ದೇಶದಿಂದ ನಗರ ಪ್ರದೇಶಗಳಿಗೆ ಸಾಗಾಣಿಕೆ ಮಾಡುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತುರ್ತಾಗಿ ತಡೆಗಟ್ಟಬೇಕಾಗಿದೆ ಎಂದರು.ನಗರದ ವಿಕಾಸ ಸೌಧದ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಇಂಟರ್ನ್ಯಾಷನಲ್ ಜಸ್ಟೀಸ್ ಮಿಷನ್(ಐಜೆಎಂ) ಹಾಗೂ ಗ್ಲೋಬಲ್ ಕನ್ಸರ್ನ್ ಇಂಡಿಯಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಏರ್ಪಡಿಸಿದ್ದ, ಮಾನವ ಕಳ್ಳಸಾಗಣೆ, ಲೈಂಗಿಕ ಶೋಷಣೆ ಮತ್ತು ಜೀತ ಕಾರ್ಮಿಕತೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಕಳ್ಳ ಸಾಗಣೆ ಮಕ್ಕಳ ಮಾರಾಟ ಪ್ರಕರಣಗಳು ಕಂಡು ಬಂದಲ್ಲಿ ಶೋಷಿತರು ಕಾನೂನಿನ ನೆರವು ಪಡೆಯಬೇಕು. ಸರ್ಕಾರಿ ಮತ್ತು ಸರಕಾರೇತರ ಸಂಸ್ಥೆಗಳು ವಿಶೇಷ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ಮಾಡಿದರು.ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ವಿಶೇಷ ವರದಿಗಾರ, ನಿವೃತ್ತ ಐಎಎಸ್ ಅಧಿಕಾರಿ ಡಾ. ಲಕ್ಷ್ಮೀಧರ ಮಿಶ್ರಾ ಮಾತನಾಡಿ, ಜೀತ ಪದ್ಧತಿ ನಿರ್ಮೂಲನೆ ಕಾಯಿದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದ ಕಾರಣ ದೇಶದ ಹಲವು ಭಾಗಗಳಲ್ಲಿ ಈ ಅನಿಷ್ಠ ಪದ್ಧತಿ ಇನ್ನೂ ಜೀವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾನೂನು ಪ್ರಕಾರ ಕೂಲಿ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು ಮತ್ತು ಅವರಿಗೆ ಕೆಲಸ ಮಾಡಲು ಹಾಗೂ ಓಡಾಡಲು ಸ್ವಾತಂತ್ರ್ಯವಿದೆ. ಆದರೆ, ಜೀತ ಪದ್ಧತಿಯಲ್ಲಿ ಕಾರ್ಖಾನೆ ಮಾಲೀಕರು ಮತ್ತು ಭೂಒಡೆಯರು ಅಮಾಯಕರನ್ನು ಬಲವಂತವಾಗಿ ಕೂಡಿ ಹಾಕಿ ಕೆಲಸ ಮಾಡಿಸಿಕೊಳ್ಳುವ ಸ್ಥಿತಿಯಿದೆ ಎಂದರು.
ಪರಿಹಾರ ಕೇಂದ್ರ ಸ್ಥಾಪನೆ
ಬಡವರು ಹೊಟ್ಟೆ ಪಾಡಿಗೆ, ಕುಟುಂಬ ನಿರ್ವಹಣೆಗೆ, ಮಕ್ಕಳ ಮದುವೆಗೆ ಮತ್ತು ಕೆಲ ಸಂದರ್ಭಗಳಲ್ಲಿ ಸಾಲ ಪಡೆಯುತ್ತಾರೆ. ಕಾರ್ಖಾನೆ ಮಾಲೀಕರು ಹಾಗೂ ಭೂ ಒಡೆಯರು ಇದನ್ನೇ ಬಂಡವಾಳ ಮಾಡಿಕೊಂಡು ಆ?ಬಡವರನ್ನು ಜೀತಕ್ಕೆ?ಇಟ್ಟುಕೊಳ್ಳುತ್ತಾರೆ ಎಂದು ಹೇಳಿದರು.ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಿಲ್ಲೆಗೊಂದು ಪರಿಹಾರ ಕೇಂದ್ರ ಸ್ಥಾಪಿಸಲು ಮುಂದಾಗಿರುವುದು ಸ್ವಾಗತಾರ್ಹ.ಇದರಿಂದ ಸಂತ್ರಸ್ತರಿಗೆ ನ್ಯಾಯ ದೊರೆಯುವ ವಿಶ್ವಾಸ ಇದೆ ಎಂದು ಮಿಶ್ರಾ ನುಡಿದರು.
ವಿಚಾರ ಸಂಕಿರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಐಜೆಎಂ ಪ್ರಾದೇಶಿಕ ನಿರ್ದೇಶಕ ಅಶೋಕ್ ವಿ.ಎಂ.ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು, ಎನ್ ಜಿಓ ಪ್ರತಿನಿಧಿಗಳು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








