ಬೆಂಗಳೂರು
ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗುತ್ತಿದೆ.
ತೀರ್ಪು ಹೊರಬಿದ್ದ ನಂತರ ರಾಜ್ಯದ ಯಾವುದೇ ಭಾಘದಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯದಂತೆ ಶಾಂತಿ-ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ಹೇಳಿದರು.
ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿ ಅನುಮಾಸ್ಪದ ವ್ಯಕ್ತಿಗಳು ವಸ್ತುಗಳ ಮೇಲೆ ನಿಗಾವಹಿಸಿ ವದಂತಿಗಳನ್ನು ಹಬ್ಬಿಸದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ರಾಜಭವನದಲ್ಲಿ ಶುಕ್ರವಾರ ನಡೆದ ಪೊಲೀಸ್ ಪದಕ ಪ್ರದಾನ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ತೀರ್ಪು ಏನೇ ಬರಲಿ, ಶಾಂತಿ-ಸೌಹಾರ್ದ ಕಾಪಾಡುವ ಸಂಬಂಧ ಈಗಾಗಲೇ ಶಾಂತಿ ಪಾಲನಾ ಸಭೆಗಳನ್ನು ನಡೆಸಲಾಗಿದೆ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಅಯೋಧ್ಯೆ ತೀರ್ಪು ನ್ಯಾಯಾಲಯ ನೀಡಿದ ನಂತರ ರಾಜ್ಯದಲ್ಲಿ ಶಾಂತಿ ಭಂಗದಂತಹ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಎಂಬ ವಿಶ್ವಾಸವಿದೆ. ಆದರೂ ಕೆಲವೆಡೆ ಕಟ್ಟೆಚ್ಚರ ವಹಿಸಿದ್ದೇವೆ ಎಂದರು.ಸಮಾಜಘಾತುಕ ವ್ಯಕ್ತಿಗಳ ಮೇಲೂ ನಿಗಾ ಇಟ್ಟಿದ್ದೇವೆ. ಶಾಂತಿ-ಸೌಹಾರ್ದತೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದಾಗಿ ಅವರು ಹೇಳಿದರು.
ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಕೇಂದ್ರದಿಂದಲೂ ಕೆಲ ಸಲಹೆ-ಸೂಚನೆಗಳು ಬಂದಿದ್ದು, ಒಟ್ಟಾರೆ ಶಾಂತಿ-ಸೌಹಾರ್ದತೆ ಕಾಪಾಡಲು ಏನು ಬೇಕೋ ಅದನ್ನೆಲ್ಲಾ ಮಾಡಲಾಗಿದೆ ಎಂದರು.
ಕಮೀಷನರ್ ಸಭೆ
ಈ ನಡುವೆ ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಅವರು ನಗರದ ಎಲ್ಲಾ ಹೆಚ್ಚುವರಿ ಪೊಲೀಸ್ ಆಯುಕ್ತರುಗಳು ಜಂಟಿ ಆಯುಕ್ತರು 8 ವಿಭಾಗಗಳ ಡಿಸಿಪಿಗಳ ಸಭೆ ನಡೆಸಿ ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಈದ್ ಮಿಲಾದ್ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಭದ್ರತೆ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








