ಚಿತ್ರದುರ್ಗ 

ವಾಹನಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞ ಡಾ. ರುದ್ರೇಶ್ ಜಿ.ಆರ್. ಹೇಳಿದರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಾಹನಗಳಿಂದ ಹೊರಸೂಸುವ ಹೊಗೆ ವಿಷಯುಕ್ತವಾಗಿದ್ದು, ಇಂತಹ ಗಾಳಿ ಸೇವನೆಯಿಂದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗುತ್ತದೆ. ಅಲ್ಲದೆ ಸಾಂಕ್ರಾಮಿಕ ರೋಗಗಳಿಗೂ ಕಾರಣವಾಗುತ್ತದೆ. ವಿಶೇಷವಾಗಿ ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು. ಶುದ್ಧ ಗಾಳಿಗಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರ ಜೊತೆಗೆ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡಲ್ಲಿ, ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಡಾ. ರುದ್ರೇಶ್ ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ ಮಾತನಾಡಿ, ವಾಹನ ಹೊಸದಾಗಿದ್ದರೂ ಸಹ ಅಧಿಕ ಭಾರ ಮತ್ತು ಅತಿ ವೇಗವಾದರೂ ಸಹ ವಾಯುಮಾಲಿನ್ಯ ಉಂಟಾಗಲು ಸಾಧ್ಯ. ಹೀಗಾಗಿ ವಾಯು ಮಾಲಿನ್ಯ ನಿಯಂತ್ರಣ ಮಾಡಲು ಅತಿಭಾರ ಮತ್ತು ಅತಿ ವೇಗದ ವಾಹನ ಚಲನೆ ಸೂಕ್ತವಲ್ಲ ಎಂದರು.ಹಿರಿಯ ಆರೋಗ್ಯ ಪರಿವೀಕ್ಷಕ ವಿಶ್ವನಾಥ ಸೇರಿದಂತೆ ಪ್ರಾದೇಶಿಕ ಸಾರಿಗೆ ಇಲಾಖೆಯ ವಿವಿಧ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








