ಚಿತ್ರದುರ್ಗ:
ಕೊರೊನಾ ಸೋಂಕು ಭೀತಿಯಲ್ಲೂ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾದದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಾಲಾಕ್ಷ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧ ನಗರದ ನಗರ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯಿಂದ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ವಸ್ತುಗಳ ವಿತರಣೆ ಮಾಡಿ, ನಂತರ ಅವರು ಮಾತನಾಡಿದರು.
ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಬಂದವರನ್ನು ಪತ್ತೆ ಮಾಡುವಲ್ಲಿ ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆರೋಗ್ಯ ಇಲಾಖೆಯ ಜೊತೆಗೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ ಎಂದು ಹೇಳಿದರು.
ಜಗತ್ತಿನ ಬಹುತೇಕ ರಾಷ್ಟ್ರಗಳು ಕೊರೊನಾ ವೈರಸ್ನಿಂದ ಪರಿತಪಿಸುತ್ತಿವೆ. ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶದಿಂದಾಗಿ ಇಷ್ಟು ದಿನಗಳ ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿತ್ತು. ಈಗ ಸರ್ಕಾರವು ಲಾಕ್ಡೌನ್ನ್ನು ಸಡಿಲಗೊಳಿಸಿರು ವುದರಿಂದ ಪ್ರತಿಯೊಬ್ಬರು ಜಾಗೃತರಾಗಿಬೇಕು. ಕೊರೊನಾ ಸೋಂಕು ಗಾಳಿಯಿಂದ ಬರುವಂತಹ ರೋಗವಲ್ಲ. ಕೆಮ್ಮುವಾಗ ಮತ್ತು ಸೀನುವಾಗ ರೋಗ ಹರಡುತ್ತದೆ. ಹಾಗಾಗಿ ನಾಗರಿಕರು ಸದಾ ಎಚ್ಚರವಿದ್ದು, ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ದುಡಿಮೆ ಇಲ್ಲದ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಆಶಾ ಕಾರ್ಯಕರ್ತೆಯರಿಗೆ ನಿತ್ಯ ಬಳಕೆಯ ಅಗತ್ಯ ವಸ್ತುಗಳನ್ನು ನೀಡಿ ಅವರಿಗೆ ಸಹಕಾರ ನೀಡುತ್ತಿರುವುದು ಉತ್ತಮ ಬೆಳೆವಣಿಗೆಯಾಗಿದ್ದು, ಇದರಿಂದ ಕೆಲಸ ಮಾಡುವವರಿಗೆ ಉತ್ತೇಜನ ನೀಡಿದಂತಾಗುತ್ತದೆ. ಆಶಾ ಕಾರ್ಯಕರ್ತೆಯರು ಜೀವ ಭಯದಲ್ಲೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಅಧ್ಯಕ್ಷ ಮಹೇಂದ್ರನಾಥ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಕಾರ್ಯನಿರ್ವಹಿಸುವಾಗ ಏನಾದರೂ ಸಮಸ್ಯೆಗಳು ಉಂಟಾದರೆ ಭಾರತೀಯ ರೆಡ್ ಕ್ರಾಸ್ ಗಮನಕ್ಕೆ ತಂದರೆ ಸಹಾಯ ಹಸ್ತ ನೀಡುತ್ತಿವೆ. ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯಬಹುದಾಗಿದೆ ಎಂದು ಹೇಳಿದರು.
ಜಿಲ್ಲೆಯ 350ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ 02 ಸೋಪು, 02 ಮಾಸ್ಕ್, 1 ಕೆ.ಜಿ.ಬೆಳೆ, 1 ಕೆ.ಜಿ.ಹಿಟ್ಟು, ಎಣ್ಣಿ, ರೈಸ್ ಸೇರಿದಂತೆ ಒಟ್ಟು 18 ಬಗೆಯ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಉಪ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಜರುಲ್ಲಾ, ಉಪಾಧ್ಯಕ್ಷರಾದ ಎಸ್,ವೀರೇಶ್, ಖಜಾಂಚಿ ಅರುಣ್ ಕುಮಾರ್, ಉಪಸಭಾಪತಿಗಳಾದ ಪ್ರಕಾಶ್ ಸಾಂಘ್ವಿ, ಸದಸ್ಯರುಗಳಾದ ಸುರೇಶ್ ಬಾಫ್ನಾ, ಅನಂತರೆಡ್ಡಿ, ಮಹಮದ್ ಆಲಿ, ಸುನೀತ ಮಲ್ಲಿಕಾರ್ಜುನ್ ಹಾಗೂ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
