ದಾವಣಗೆರೆ:
ಮಧ್ಯಮ ವರ್ಗದ ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮುದ್ರಾಂಕ ಶುಲ್ಕ ಇಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ದಾವಣಗೆರೆ ಜಿಲ್ಲಾಡಳಿತ ಭವನದದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಿನ್ನೆ ಸಂಜೆ ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಹಿಂದೆ ಸ್ಟ್ಯಾಂಪ್ಡ್ಯೂಟಿ ಶೇ 5.6ರಷ್ಟು ಇತ್ತು. ಈಗ 20 ಲಕ್ಷ ರೂಪಾಯಿ ವೆಚ್ಚದ ಒಳಗೆ ಮನೆ ಕಟ್ಟಿಕೊಳ್ಳುವವರಿಗೆ ಶೇ 2 ಮತ್ತು 35 ಲಕ್ಷ ರೂಪಾಯಿ ವೆಚ್ಚದ ಒಳಗೆ ಮನೆ ಕಟ್ಟಿಕೊಳ್ಳುವವರಿಗೆ ಶೇ 3 ಮಾತ್ರ ಸ್ಟ್ಯಾಂಪ್ಡ್ಯೂಟಿ ವಿಧಿಸಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 4,500 ಕೋಟಿ ರೂಪಾಯಿ ನಷ್ಟವಾಗಲಿದೆ. ಆದರೂ ಜನರಿಗೆ ಉಪಯೋಗವಾಗಬೇಕು ಎಂದು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.
ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು. ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿರುವುದನ್ನು ದಂಡದೊಂದಿಗೆ ಸಕ್ರಮ ಮಾಡಬೇಕು. ಇದರಿಂದ ಜನರಿಗೂ ಸರ್ಕಾರಕ್ಕೂ ಲಾಭವಾಗುತ್ತದೆ ಎಂದರು.
ಈಗಾಗಲೇ 49 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ತಾಲ್ಲೂಕುಗಳಲ್ಲಿ ಇನ್ನೂ ಒಂದು ತಿಂಗಳ ಕಾಲ ಬರ ಕಾಮಗಾರಿ ಮುಂದುವರಿಸಬೇಕು. ಅದಕ್ಕಾಗಿ 112 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರಿಗೆ 14 ಕೋಟಿ ಅನುದಾನ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಡಿಸಿ ಪೂಜಾರ ವೀರಮಲ್ಲಪ್ಪ ಮಾಹಿತಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ್, ಎಸ್.ವಿ.ರಾಮಚಂದ್ರ, ಎಸ್. ರಾಮಪ್ಪ, ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಮ್ಮ ಮರುಳಪ್ಪ, ಸಿಇಒ ಪದ್ಮ ಬಸವಂತಪ್ಪ, ಮೇಯರ್ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿಎಚ್ಒ ಡಾ.ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
