ಮೈಸೂರು: 
ಮೈಸೂರಿನಲ್ಲಿ ವರದಿಯಾಗುತ್ತಿರುವ ಕೊರೋನಾ ಪ್ರಕರಣಗಳಲ್ಲಿ ಹೆಚ್ಚಿನವು ನರಸಿಂಹರಾಜ ಕ್ಷೇತ್ರದ ನಾಗರಿಕರಲ್ಲಿಯೇ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಇದೊಂದು ಭಾಗವನ್ನು ಲಾಕ್ ಡೌನ್ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೈತೃತ್ವದಲ್ಲಿ ಕೋವಿಡ್-19 ನಿಯಂತ್ರಣ, ನೀರಾವರಿ, ಪ್ರಹಾವ ಪರಿಸ್ಥಿತಿ ನಿಭಾಯಿಸುವ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲೆಯ ನರಸಿಂಹರಾಜ ಕ್ಷೇತ್ರದಲ್ಲಿ ಸ್ವಲ್ಪ ಸಮಸ್ಯೆಯಾಗುತ್ತಿದೆ. ಅಲ್ಲಿಯೇ ಶೇ. 50 ರಷ್ಟು ಪ್ರಕರಣಗಳು ಕಂಡುಬರುತ್ತಿದೆ. ಅಲ್ಲಿ ಕೊನೇ ಕ್ಷಣದವರೆಗೂ ಪರಿಕ್ಷೆಗೆ ಬಾರದೆ, ಆರೋಗ್ಯ ತೀವ್ರ ಹದಗೆಟ್ಟ ಮೇಲೆ ಬರುತ್ತಿದ್ದಾರೆ. ಹೀಗಾಗಿ ಈ ಭಾಗವನ್ನು ಮಾತ್ರ ಲಾಕ್ ಡೌನ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದರು.
ಈ ಕ್ಷೇತ್ರದ ನಾಗರಿಕರನ್ನು ಹೆಚ್ಚಿನ ರೀತಿಯಲ್ಲಿ ಪರೀಕ್ಷೆಗೊಳಪಡಿಸಿ ಪರಿಸ್ಥಿತಿ ಇನ್ನೂ ಕೈಮೀರಿ ಹೋಗದಂತೆ ತಡೆ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.ನೀರಾವರಿಗೆ ಸಂಬಂಧಪಟ್ಟಂತೆ ಯಾವುದೇ ಯಾವುದೇ ಸಮಸ್ಯೆ ಸದ್ಯದ ಪರಿಸ್ಥಿತಿಯಲ್ಲಿ ಇಲ್ಲ. ಇನ್ನು ರಸಗೊಬ್ಬರದ ಕೊರತೆಯೂ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಬಿತ್ತನೆ ಪ್ರಕ್ರಿಯೆಯೂ ನಡೆಯುತ್ತಿದೆ. ಪ್ರವಾಹದಂತಹ ಪರಿಸ್ಥಿತಿ ಎದುರಾದರೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಮೈಸೂರು ಜಿಲ್ಲೆಯ ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ಸಿಬ್ಬಂದಿಯ ಕೊರತೆ ಇದ್ದು ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳ ಶೀಘ್ರವಾಗಿ ಕ್ರಮ ಕೈಗೊಂಡು ವ್ಯವಸ್ಥೆ ಮಾಡಿಕೊಡಬೇಕು ಎಂದು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








