ಶಿರಾ:
ನಗರದ ಅಂಬೇಡ್ಕರ್ ವಸತಿ ನಿಲಯದ 29 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಮಂಗಳವಾರ ಸ್ಥಳಕ್ಕೆ ಕ್ಷೇತ್ರದ ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ ಮಾಡಿದರು.
ನಗರದ ಹೊರ ವಲಯದಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ಒಟ್ಟು 194 ವಿದ್ಯಾರ್ಥಿಗಳಿದ್ದು, ಕಳೆದ ಕೆಲವು ದಿನಗಳಿಂದಲೂ ಕೆಮ್ಮು ಹಾಗೂ ಜ್ವರದ ಲಕ್ಷಣಗಳಿದ್ದ ಪರಿಣಾಮ ರೋಗ ಲಕ್ಷಣಗಳಿದ್ದ 60 ಮಂದಿ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಯ ಪರೀಕ್ಷೆ ಮಾಡಲಾಗಿದ್ದು,
ಈ ಸಂಬಂಧ 4 ಅಡುಗೆ ಸಿಬ್ಬಂದಿ ಹಾಗೂ 26 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಈ ಸಂಬಂಧ ಕೂಡಲೆ ವಸತಿ ನಿಲಯಕ್ಕೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಣೆ ಮಾಡಿದರು.
ಸುದ್ದಿಗಾರರೊಂದಿಗೆ ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ಮಾತನಾಡಿ, ಸೋಂಕು ಕಂಡು ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಇಲ್ಲಿಗೆ ಸಮೀಪದ ಆಂಜನೇಯಸ್ವಾಮಿ ದೇವಸ್ಥಾನ ಸಮಿತಿಯ ಸಮುದಾಯ ಭವನದಲ್ಲಿನ ಕೊಠಡಿಗಳಲ್ಲಿ ಹೋಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕು ಕಂಡು ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಅಡುಗೆ ತಯಾರಿಸಿ ನೀಡಲಾಗುತ್ತಿದೆ. ಸೋಂಕು ಕಂಡು ಬಂದ ವಿದ್ಯಾರ್ಥಿ ನಿಲಯವನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಶಾಸಕ ಡಾ.ರಾಜೆಶ್ಗೌಡ ಹೇಳಿದ್ದಾರೆ.
ತಾಲ್ಲೂಕು ದಂಡಾಧಿಕಾರಿ ಮಮತಾ, ತಾ. ವೈದ್ಯಾಧಿಕಾರಿ ಡಾ.ಮೋಹನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
