ಬೆಂಗಳೂರು:
ರಾಜ್ಯಾಧ್ಯಂತ ತಾರಕಕ್ಕೇರಿರುವಂತ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ 2 ವಾರಗಳ ಕಾಲ ಶಾಲಾ-ಕಾಲೇಜುಗಳ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ನಗರದ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಬುಧವಾರದಿಂದಲೇ ಅನ್ವಯವಾಗುವಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ನಗರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಫೆಬ್ರವರಿ 22ರವರೆಗೆ ಈ ನಿಷೇಧಾಜ್ಞೆ ಜಾರಿಯಿರಲಿದೆ.
144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಕಾರಣ, ಶಾಲಾ-ಕಾಲೇಜುಗಳ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಧರಣಿ, ಮೆರವಣಿಗೆ, ಜಾಧಾ ಮಾಡುವಂತಿಲ್ಲ. ಈ ನಿಯಮ ಮೀರಿ ಮಾಡಿದ್ರೇ.. ಕಾನೂನು ಕ್ರಮ ಜರುಗಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
