ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಅಂಗವಾಗಿ ಶ್ರೀಗಳಿಂದ ಭಿಕ್ಷಾಟನೆ

ತುಮಕೂರು:

ಐತಿಹಾಸಿಕ ಪ್ರಸಿದ್ದ ಶ್ರೀ ಸಿದ್ದಗಂಗಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಹಿರಿಯ ಶ್ರೀಗಳ ಮಾದರಿಯಲ್ಲೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ನಗರದಾದ್ಯಂತ ಸಂಚರಿಸಿ ಭಿಕ್ಷಾಟನೆ ನಡೆಸಿದರು.

ಶ್ರೀಮಠದ ಪರಂಪರೆಯನ್ನು ಮುನ್ನಡೆಸುತ್ತಿರುವ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಹಿರಿಯ ಶ್ರೀಗಳಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳು, ವರ್ತಕರನ್ನು ಭೇಟಿ ಮಾಡಿ ಭಿಕ್ಷಾಟನೆ ನಡೆಸಿದರು.

ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ರೆಡ್‍ಕ್ರಾಸ್ ಬಿಲ್ಡಿಂಗ್, ಮಂಡಿಪೇಟೆಯ ವಿವಿಧ ಅಂಗಡಿಗಳು ಸೇರಿದಂತೆ ನಗರದಾದ್ಯಂತ ಶ್ರೀಗಳು ಸಂಚರಿಸಿ ಭಕ್ತರಿಂದ ಕಾಣಿಕೆ, ದವಸ ಧಾನ್ಯಗಳನ್ನು ಸ್ವೀಕರಿಸಿದರು.

ಭಿಕ್ಷಾಟನೆಗೆ ಬಂದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಂಡ ವರ್ತಕರು, ಜನಸಾಮಾನ್ಯರು ಕಾಣಿಕೆ, ದವಸ ಧಾನ್ಯಗಳನ್ನು ನೀಡಿ ಆಶೀರ್ವಾದ ಪಡೆದರು.

ಭಿಕ್ಷಾಟನೆ ವೇಳೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು, ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಹಾಗಾಗಿ ಶ್ರೀಕ್ಷೇತ್ರದಲ್ಲಿ ಜಾತ್ರೆ ಮಾಡಲಾಗುತ್ತಿದೆ.

ಸೋಂಕು ಕಡಿಮೆಯಾಗಿದ್ದರೂ ಸಹ ಜಾತ್ರೆಗೆ ಮತ್ತು ಶ್ರೀಮಠಕ್ಕೆ ಬರುವ ಭಕ್ತಾದಿಗಳಿಗೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗುತ್ತಿದೆ.

ಶ್ರೀಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಪರಮಪೂಜ್ಯರು ನಡೆಸಿಕೊಂಡು ಬಂದಿರುವ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದ್ದು, ನಗರದ ಮಂಡಿಪೇಟೆ, ಅಶೋಕ ರಸ್ತೆ ಸೇರಿದಂತೆ ವಿವಿಧೆಡೆ ಭಿಕ್ಷಾಟನೆ ನಡೆಸಲಾಗಿದೆ ಎಂದರು.

ಶ್ರೀಗಳ ಭಿಕ್ಷಾಟನೆ ಸಂದರ್ಭದಲ್ಲಿ ಟಿ.ಕೆ. ನಂಜುಂಡಪ್ಪ, ಕೋರಿ ಮಂಜಣ್ಣ, ನೇರಳಾಪುರ ಕುಮಾರ್, ಪಂಚಾಕ್ಷರಯ್ಯ, ಎಂ.ಬಿ. ಕುಮಾರ್, ಎಲ್‍ಐಸಿ ಪಂಡಿತ್, ಮಲ್ಲೇಶ್ ಸೇರಿದಂತೆ ಶ್ರೀಮಠದ ಭಕ್ತಾದಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link