ಪಠ್ಯ ಪರಿಷ್ಕರಣೆ: ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು:

ಬಹಿರಂಗಗೊಳ್ಳದ ವರದಿ : ಮುದ್ರಣಕ್ಕೆ ತರಾತುರಿ ಆದೇಶ 

ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪುಟ ಸಂಖ್ಯೆ 82ರಲ್ಲಿರುವ ಹೊಸ ಧರ್ಮಗಳು ಏಕೆ ಉದಯಿಸಿದವು ಎಂಬುದರ ಪರಿಷ್ಕರಣೆಯೂ ಸೇರಿದಂತೆ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯಗಳಲ್ಲಿ ಇರಬಹುದಾದ ಸೂಕ್ಷ್ಮ, ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಕರ್ನಾಟಕ ಪಠ್ಯಪುಸ್ತಕ ಸಂಘದ ಮೂಲಕ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಸಚಿವ ಬಿ.ಸಿ ನಾಗೇಶ್ ಅವರು ನೀಡಿರುವ ಹೇಳಿಕೆ ಬೆನ್ನಲ್ಲೇ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ.

ಉಕ್ರೇನ್​​​ ನಲ್ಲಿ ಮೃತಪಟ್ಟ ನವೀನ್​​​ ನಿವಾಸಕ್ಕೆ ರಾಜ್ಯಪಾಲರ ಭೇಟಿ

2022ರ ಮಾರ್ಚ್ 8ರಂದು ನೀಡಿರುವ ವರದಿಯನ್ನು ಸರ್ಕಾರವು ಇದುವರೆಗೂ ಬಹಿರಂಗಗೊಳಿಸಿಲ್ಲ. ಆದರೆ ಸಮಿತಿಯು ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು 2022-23ನೇ ಸಾಲಿಗೆ ಅಳವಡಿಸಿಕೊಳ್ಳಲು ಸೂಚಿಸಿದೆಯಲ್ಲದೆ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಿಸಲು 2022ರ ಮಾರ್ಚ್ 19ರಂದು ಆದೇಶವನ್ನೂ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು, 2 ಮತ್ತು 4ನೇ ತರಗತಿಗಳ ಪರಿಸರ ಅಧ್ಯಯನದ ಪಠ್ಯಪುಸ್ತಕಗಳನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಪರಿಷ್ಕೃತಗೊಳಿಸಿರುವುದನ್ನು ಸರ್ಕಾರವು ಘಟನೋತ್ತರವಾಗಿ ಅನುಮತಿ ನೀಡಿರುವುದು ಆದೇಶದಿಂದ ತಿಳಿದು ಬಂದಿದೆ.

ಎಸ್​​ಎಸ್​ಎಲ್​ಸಿ ಪರೀಕ್ಷೆಗೆ ಶುರುವಾಯ್ತು ಕೌಂಟ್​ಡೌನ್; ಎಕ್ಸಾಂ ಬರೆಯಲಿದ್ದಾರೆ 8,73,846 ವಿದ್ಯಾರ್ಥಿಗಳು

6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಕನ್ನಡ ಹಾಗೂ ಆಂಗ್ಲ ಮಾಧ್ಯಮ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಪರಿಷ್ಕರಿಸಿರುವ ಇತರೆ 5 ಮಾಧ್ಯಮಗಳಲ್ಲಿ (ಉರ್ದು, ತಮಿಳು, ತೆಲುಗು, ಮರಾಠಿ ಹಾಗೂ ಹಿಂದೆ) ಅನುವಾದಿಸಿ 2022-23ನೇ ಸಾಲಿನಿಂದಲೇ ಅನುವಾದ ಕಾರ್ಯ ಮುಗಿದ ನಂತರ ಮುದ್ರಿಸಿ ವಿತರಿಸಬೇಕು ಎಂದು ಆದೇಶ ಹೊರಡಿಸಿದೆ.

‘ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲಾ ವಿಷಯಗಳು, ಲೇಖಕರು, ಕವಿಗಳು, ಚಿತ್ರಗಳು, ಭೂಪಟಗಳು, ನಕ್ಷೆಗಳು ಹಾಗೂ ಆಧಾರಗಳಿಗೆ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಜವಾಬ್ದಾರರಾಗಿದ್ದಾರೆ.

ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ. ಮತ್ತು ಪುನರ್ ಪರಿಷ್ಕರಣೆ ಕುರಿತು ನೀಡಿರುವ ಅಂಶವನ್ನು ಸಮಿತಿಯ ಅಧ್ಯಕ್ಷರ ನುಡಿಯನ್ನು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು,’ ಎಂದು ಆದೇಶದಲ್ಲಿ ಹೇಳಲಾಗಿದೆ.

ಶ್ರೀರಾಮುಲು ಮನೆ ಬಳಿ ಸಾರಿಗೆ ನೌಕರರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ: ಅಧ್ಯಕ್ಷ ಚಂದ್ರಶೇಖರ್

ಸಾಮಾನ್ಯವಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆ ಮತ್ತು ಪುನರ್ ಪರಿಷ್ಕರಣೆಗೊಳಿಸಿದ ನಂತರ ಬಹಿರಂಗೊಳಿಸಬೇಕಿತ್ತು. ಯಾವ ಕಾರಣಗಳಿಗಾಗಿ ಪಾಠಾಂಶವನ್ನು ಕೈ ಬಿಡಲಾಗಿದೆ ಎಂದು ಸಮರ್ಥನೀಯ ಅಂಶಗಳನ್ನು ಸಾರ್ವಜನಿಕಗೊಳಿಸಬೇಕಿತ್ತು. ಅಲ್ಲದೆ ಮುದ್ರಣಕ್ಕೂ ಮುನ್ನ ತಜ್ಞರು, ಸಾಹಿತಿ, ಲೇಖಕರ ಆಕ್ಷೇಪಣೆಗಳಿಗೆ ಅವಕಾಶ ನೀಡಬೇಕಿತ್ತು. ಆದರಿಲ್ಲಿ ಆಕ್ಷೇಪಣೆಗಳಿಗೆ ಮೊದಲು ಅವಕಾಶ ನೀಡದೆಯೇ ಪುನರ್ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳ ಮುದ್ರಣಕ್ಕೆ ಆದೇಶ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ವೈದಿಕ ಧರ್ಮದ ದೋಷಗಳಿಂದಾಗಿಯೇ ಹೊಸ ಧರ್ಮಗಳ ಉದಯವಾದವು ಎಂಬ ಸಾರಾಂಶವಿದ್ದ ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ರಚನೆಯಾಗಿದ್ದ ಪರಿಶೀಲನಾ ಸಮಿತಿಯು ಗಡುವು ಮೀರಿದರೂ ವರದಿ ಸಲ್ಲಿಸಿರಲಿಲ್ಲ.

ಸಮಿತಿ ರಚನೆಯಾದ ದಿನದಿಂದ ಎಷ್ಟು ಬಾರಿ ಸಭೆ ನಡೆಸಲಾಗಿದೆ ಎಂಬ ಮಾಹಿತಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಬಳಿ ಯಾವ ಮಾಹಿತಿಯೂ ಇರಲಿಲ್ಲ. ಅಲ್ಲದೆ ಗಡುವು ಮೀರಿದರೂ ವರದಿ ನೀಡುವ ಸಂಬಂಧ ಇಲಾಖೆಯು ಸಮಿತಿಯೊಂದಿಗೆ ಯಾವುದೇ ಪತ್ರ ವ್ಯವಹಾರವನ್ನೂ ನಡೆಸಿರಲಿಲ್ಲ. ಹಾಗೆಯೇ ವರದಿ ಸಲ್ಲಿಕೆಗೆ ಅವಧಿ ವಿಸ್ತರಿಸುವ ಸಂಬಂಧವೂ ಸಮಿತಿಯು ಸರ್ಕಾರಕ್ಕೆ ಯಾವುದೇ ಪತ್ರವನ್ನೂ ಬರೆದಿರಲಿಲ್ಲ .

70 ವರ್ಷ ಮೇಲ್ಪಟ್ಟ ನಿವೃತ್ತ ಸರ್ಕಾರಿ ನೌಕರ ಪಿಂಚಣಿ ಹೆಚ್ಚಳ ಕುರಿತು ಪರಿಶೀಲನೆ : ಸಿಎಂ

ಪಠ್ಯ ಪುಸ್ತಕದಲ್ಲಿ ಇದ್ದಿದ್ದೇನು?

ಉತ್ತರ ವೇದಗಳ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ, ಯಜ್ಞಗಳ ಹೆಸರಿನಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆಯು ಕುಂಠಿತವಾಯಿತು. ಅಷ್ಟು ಮಾತ್ರವಲ್ಲ ಯಾಗ, ಯಜ್ಞಗಳಲ್ಲಿ ಆಹಾರಧಾನ್ಯ, ಹಾಲು, ತುಪ್ಪಗಳನ್ನು ಹವಿಸ್ಸು ಎಂದು ದಹಿಸಲಾಗುತ್ತಿತ್ತು. ಪರಿಣಾಮವಾಗಿ ಆಹಾರದ ಅಭಾವ ಕೂಡ ಸೃಷ್ಟಿಯಾಯಿತು.

ಇನ್ನೊಂದು ಕಡೆ ವೈದಿಕ ಆಚರಣೆಗಳಾದ ಯಾಗ, ಯಜ್ಞ, ಮೊದಲಾದ ಆಚರಣೆಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಈ ದುಬಾರಿ ಆಚರಣೆಗಳು ಜನ ಸಾಮಾನ್ಯರಿಗೆ ಸಾಧ್ಯವಿರಲಿಲ್ಲ. ಈ ಆಚರಣೆಗಳನ್ನು ಸಂಸ್ಕೃತ ಮಂತ್ರಗಳ ಮೂಲಕ ನಡೆಸಲಾಗುತ್ತಿತ್ತು. ಸಂಸ್ಕೃತ ಪುರೋಹಿತ ಭಾಷೆಯಾದ್ದರಿಂದ ಅದು ಜನ ಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ.

ಜನ ಸಾಮಾನ್ಯರ ಭಾಷೆಯಲ್ಲಿಯೇ ಸರಳಮಾರ್ಗಗಳ ಮೂಲಕ ಮುಕ್ತಿ ತೋರುವ ಹೊಸ ಧರ್ಮಗಳನ್ನು ಜನರು ಅಪೇಕ್ಷಿಸುತ್ತಿದ್ದರು. ಮತ್ತೊಂದು ಕಡೆ ಉತ್ತರ ವೇದಗಳ ಕಾಲದಲ್ಲಿ ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆ ಆರಂಭವಾಯಿತು. ಇದು ಸಮಾಜದಲ್ಲಿ ತಾರತಮ್ಯಕ್ಕೂ ಎಡೆಮಾಡಿತು.

20 ವರ್ಷ ಕಳೆದರೂ ಪರಿಹಾರ ನೀಡದ ಕೆ.ಐ.ಎ.ಡಿ.ಬಿ ; ನಾವು ಮರಣ ಹೊಂದುವ ಮೊದಲು ಪರಿಹಾರ ಕೊಡಿ; ಸರ್ಕಾರಕ್ಕೆ ವೃದ್ಧರ ಅಳಲು – ವಿಧಾನಸೌಧದ ಮುಂದೆ ಕರಪತ್ರ ಹಂಚಿ ಪ್ರತಿಭಟನೆ ನಡೆಸಿದ ಸಂತ್ರಸ್ತ ರೈತರು

ಸಮಾಜದಲ್ಲಿ ಬ್ರಾಹ್ಮಣರೆಂದು ಕರೆಯಲ್ಪಡುತ್ತಿದ್ದ ಪುರೋಹಿತ ವರ್ಗವು ಹಲವು ಸವಲತ್ತುಗಳನ್ನು ಹೊಂದಿತ್ತು. ಇದೇ ಕಾಲದಲ್ಲಿ ಕ್ಷತ್ರಿಯರು ಕೂಡ ಪ್ರಾಬಲ್ಯಕ್ಕೆ ಬರಲಾರಂಭಿಸಿದರು. ಪರಿಣಾಮವಾಗಿ ನಂತರದ ಕಾಲದಲ್ಲಿ ಹಲವು ಗಣರಾಜ್ಯಗಳು ಉದಯಿಸಿದವು. ಈ ಗಣರಾಜ್ಯಗಳ ಕ್ಷತ್ರಿಯರು ಬಹು ಸವಲತ್ತನ್ನು ಹೊಂದಿದ್ದ ಬ್ರಾಹ್ಮಣರಿಗೆ ಪ್ರತಿಯಾಗಿ ಹೊಸ ಧರ್ಮಗಳ ಉದಯಕ್ಕೆ ಕಾರಣರಾದರು ಎಂಬ ವಿವರಣೆ ಇತ್ತು.

ಇವೆಲ್ಲವುಗಳ ಪರಿಣಾಮವಾಗಿ 2600 ವರ್ಷಗಳ ಹಿಂದೆ ಗಂಗಾ ಬಯಲಿನಲ್ಲಿ ಸುಮಾರು 62 ಹೊಸ ಧರ್ಮಗಳು ಉದಯಿಸಿದವು. ಅವುಗಳಲ್ಲಿ ಜೈನಧರ್ಮ ಮತ್ತು ಬೌದ್ಧ ಧರ್ಮಗಳು ಪ್ರಮುಖವಾದವು. ಬೌದ್ಧ ಧರ್ಮ ಸ್ಥಾಪಕ ಗೌತಮ ಬುದ್ಧ ಹಾಗೂ ಜೈನ ಧರ್ಮದ ಪ್ರಮುಖ ತೀರ್ಥಂಕರ ವರ್ಧಮಾನ ಮಹಾವೀರ.

ಈ ಇಬ್ಬರೂ ಕೂಡ ಗಣರಾಜ್ಯಗಳ ಕುಲಗಳಿಗೆ ಸೇರಿದ ಕ್ಷತ್ರಿಯರು ಎಂದು ಹೇಳಲಾಗಿತ್ತು.ಇದು ವಿವಾದಕ್ಕೀಡಾಗುತ್ತಿದ್ದಂತೆ ಶಿಕ್ಷಣ ಇಲಾಖೆಯ ಹಿಂದಿನ ಸಚಿವ ಎಸ್ ಸುರೇಶ್‍ಕುಮಾರ್ ಅವರು ಆರನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದ ಭಾಗವಾಗಿರುವ ವೇದ ಕಾಲದ ಸಂಸ್ಕೃತಿ ಕುರಿತು ಪಾಠ ಮಾಡದಂತೆ ಶಿಕ್ಷಕರಿಗೆ ಆದೇಶ ಹೊರಡಿಸಿದ್ದರು. ಆದರೆ ಈ ಆದೇಶಕ್ಕೆ ಸ್ಪಷ್ಟ ಕಾರಣವನ್ನು ನೀಡಿರಲಿಲ್ಲ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link