ದೇವನಹಳ್ಳಿ:
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ತಾಲ್ಲೂಕು ಘಟಕದಿಂದ ಫೆ.22ರಂದು ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಗೆ ಆಕ್ಷೇಪ ವ್ಯಕ್ತವಾಗಿದೆ.
ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರವನ್ನು ಯಾವುದೇ ರಾಜಕೀಯ ಸಭೆ, ಸಮಾರಂಭಗಳಿಗೆ ಬಳಕೆ ಮಾಡುವಂತಿಲ್ಲ ಎಂಬ ಸ್ಪಷ್ಟ ಆದೇಶವಿದೆ. ಆದರೂ, ಶಾಸಕ ನಿಸರ್ಗ ನಾರಾಯಣಸ್ವಾಮಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ತಾಲ್ಲೂಕಿನ ವಿವಿಧೆಡೆಯಿಂದ ಬಂದಿದ್ದ ಕಾರ್ಯಕರ್ತರು ಬಿ.ಬಿ ರಸ್ತೆಯ ತುಂಬೆಲ್ಲಾ ವಾಹನ ನಿಲ್ಲಿಸಿದ್ದರ ಪರಿಣಾಮ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಜೊತೆಗೆ, ಸ್ಥಳೀಯ ವ್ಯಾಪಾರಸ್ಥರು ಮತ್ತು ವಾಹನ ಸವಾರರು ಕಿರಿಕಿರಿ ಅನುಭವಿಸಿದರು.
ಜಿ20 ಭದ್ರತೆಗೆ ಬಂದಿದ್ದ ಪೊಲೀಸರು ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ಸಭೆಯಿಂದ ಅವರು ಹೊರಗೆ ಹೋಗಲು ಆಗದೆ ಪರದಾಡಿದರು.
ಪ್ರಶಾಂತವಾಗಿದ್ದ ಪ್ರವಾಸಿ ಮಂದಿರದಲ್ಲಿ ರಾಜಕೀಯ ಭಾಷಣದಿಂದ ಅಕ್ಕಪಕ್ಕದ ಶಿಕ್ಷಣ ಇಲಾಖೆ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲ್ಲೂಕು ವೈದ್ಯಾಧಿಕಾರಿ ಕಚೇರಿ ಸಿಬ್ಬಂದಿ ಸುಗಮವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗದೆ ತೊಂದರೆ ಅನುಭವಿಸಿದರು.
ಮೈದಾನ ಅಥವಾ ಖಾಸಗಿ ಜಾಗದಲ್ಲಿ ರಾಜಕೀಯ ಸಮಾರಂಭ ಆಯೋಜಿಸದೆ ಸರ್ಕಾರಿ ಜಾಗದಲ್ಲಿ ಆಯೋಜಿಸಿರುವುದು ಸರಿಯಲ್ಲ. ಇದು ಶಾಸಕರ ಅಧಿಕಾರ ದುರ್ಬಳಕೆಯಾಗಿದೆ ಕೆಲವು ನಾಗರಿಕರು ದೂರಿದರು.
ಈ ಕುರಿತು ಪ್ರತಿಕ್ರಿಯೆ ಪಡೆಯಲು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲಾಯಿತು. ಆದರೆ ಅವರು ಲಭ್ಯವಾಗಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ