ನವದೆಹಲಿ:
ಅದಾನಿ ಪ್ರಕರಣ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಮತ್ತು ನ್ಯಾಯಮೂರ್ತಿ ಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ, ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್ ಶರ್ಮಾ, ಕಾಂಗ್ರೆಸ್ ನಾಯಕಿ ಜಯ ಠಾಕೂರ್ ಮತ್ತು ಮತ್ತೋರ್ವ ಅನಾಮಿಕ ಜೈಸ್ವಾಲ್ ಸಲ್ಲಿಸಿದ್ದ ಅರ್ಜಿಗಳ ಮೇಲಿನ ವಿಚಾರಣೆ ಬಳಿಕ ಈ ಆದೇಶ ನೀಡಿದರು.
ಸಮಿತಿಯು ಒ.ಪಿ.ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್ (ನಿವೃತ್ತ), ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡಿರುತ್ತದೆ. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರು ತಜ್ಞರ ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಪೀಠ ಹೇಳಿದೆ.
ಸಮಿತಿಯು ಪರಿಸ್ಥಿತಿಯ ಒಟ್ಟಾರೆ ಮೌಲ್ಯಮಾಪನ ಮಾಡುತ್ತದೆ ಮತ್ತು ಮಾರುಕಟ್ಟೆಗಳಲ್ಲಿನ ಚಂಚಲತೆಗೆ ಕಾರಣವಾದ ಅಂಶಗಳನ್ನು ಒದಗಿಸುತ್ತದೆ. ಅಲ್ಲದೆ, ಸಮಿತಿಯು ಹೂಡಿಕೆದಾರರ ಜಾಗೃತಿಯನ್ನು ಬಲಪಡಿಸುವ ಕ್ರಮಗಳನ್ನು ಸೂಚಿಸುತ್ತದೆ ಮತ್ತು ಅದಾನಿ ಗ್ರೂಪ್ ಅಥವಾ ಇತರ ಕಂಪನಿಗಳಿಗೆ ಸಂಬಂಧಿಸಿದಂತೆ ಸೆಕ್ಯುರಿಟೀಸ್ ಮಾರುಕಟ್ಟೆಗಳಿಗೆ ಸಂಬಂಧಿಸಿದ ಕಾನೂನುಗಳ ಉಲ್ಲಂಘನೆಯಲ್ಲಿ ನಿಯಂತ್ರಕದ ವೈಫಲ್ಯವಿದೆಯೇ ಎಂಬ ಬಗ್ಗೆ ತನಿಖೆ ಮಾಡುತ್ತದೆ ಎಂದು ಅದು ಹೇಳಿದೆ.








