ಮೈಸೂರು
ಭಾರತದ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ನಲ್ಲಿ ಮತ್ತೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ಮೇ 10ರಂದು ಚುನಾವಣೆ ನಡೆಯಲಿದೆ. ಆದರೆ ಮೋದಿ ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸುತ್ತಿಲ್ಲ.
ಏಪ್ರಿಲ್ 13ರಂದು ಕರ್ನಾಟಕದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಬಂಡೀಪುರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಮತ್ತು ಬೆಳ್ಳಿ ನಾಣ್ಯದ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9ರಂದು 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. 2018ರಲ್ಲಿ ನಡೆದ ಹುಲಿಗಣತಿ ಪ್ರಕಾರ ಕರ್ನಾಟಕದಲ್ಲಿ 524 ಮತ್ತು ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ದವು. 2022ರಲ್ಲಿ ಮತ್ತೆ ಹುಲಿ ಗಣತಿ ನಡೆದಿದೆ. ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಅಧಿಕವಾಗಿದ್ದು, ದೇಶದಲ್ಲಿ ಹುಲಿಗಳು ಇರುವ ಸಂಖ್ಯೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/03/Untitled-24-1.jpg)