ಬೆಂಗಳೂರು
ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಬಡಿದಾಡಿ ಕೋರ್ಟು ಕಚೇರಿ ಅಲೆದಿದ್ದು ಸಾಕು,ಇನ್ನು ಸೌಹಾರ್ದತೆಯಿಂದ ಮೇಕೆದಾಟು ಸಮಸ್ಯೆಯನ್ನು ಪರಿಹರಿಸಿಕೊಳ್ಳೋಣ ಬನ್ನಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಮಳುನಾಡಿಗೆ ಮನವಿ ಮಾಡಿಕೊಂಡಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು,ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.ಸಮುದ್ರಕ್ಕೆ ಹೋಗುವ ನೀರನ್ನು ಹಿಡಿದಿಟ್ಟುಕೊಂಡು ನಾವು ಬಳಸುವುದರಿಂದ ಅದು ಆತಂಕಪಡುವ ಅಗತ್ಯವೂ ಇಲ್ಲ ಎಂದರು.
ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ಹಿಂದಿದ್ದ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ.ಆದರೆ ಒಂದು ಪೈಸೆಯನ್ನೂ ಖರ್ಚು ಮಾಡಿಲ್ಲ ಎಂದು ವ್ಯಂಗ್ಯವಾಡಿದರು.
ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣ ತಮ್ಮಂದಿರೇ ಎಂದ ಅವರು, ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ ಎಂದರು.
ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ.
ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿAದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.
ಈ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ, ಹೀಗಾಗಿ ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಅವರು ಮನವಿ ಮಾಡಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
