ರಾಯಚೂರು:
ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಜಿ.ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಎಂಟು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿದ್ಯುತ್ ಸ್ಪರ್ಶದಿಂದ ಲೈನ್ಮ್ಯಾನ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಕೇರಾ ತಾಲೂಕಿನ ಆಲದಮರದ ತಾಂಡಾಕ್ಕೆ ಶಾಸಕಿ ಕರಿಯಮ್ಮ ಭೇಟಿ ನೀಡಿದ ವೇಳೆ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಶಾಸಕಿ ಕರಿಯಮ್ಮ ತಡವಾಗಿ ಸ್ಥಳಕ್ಕೆ ಬಂದರು ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. 28 ವರ್ಷದ ವಿರೂಪಾಕ್ಷ ಜೂನ್ 4ರಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ವಿದ್ಯುತ್ ಪೂರೈಕೆಯಲ್ಲಿನ ಏರುಪೇರು ಸರಿಪಡಿಸಲು ವಿದ್ಯುತ್ ಕಂಬ ಹತ್ತಿದ್ದಾರೆ. ಈ ವೇಳೆ ಅವರು ಮೃತಪಟ್ಟಿದ್ದರು. ಆ ಸ್ಥಳಕ್ಕೆ ಕರಿಯಮ್ಮ ಬಂದಾಗ ಆರೋಪಿ ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ವಿಡಿಯೋವನ್ನು ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
![](https://prajapragathi.com/wp-content/uploads/2023/06/fir.jpg)