ಚಿಕ್ಕಮಗಳೂರು:
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕೋಮುವಾದಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದು, ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭ ಮಂಗಳೂರಿನಲ್ಲಿ ನಡೆದ ಚೂರಿ ಇರಿತ ಘಟನೆಯನ್ನು ಪ್ರಸ್ತಾಪಿಸಿ, ಗೂಂಡಾಗಿರಿ ತಲೆ ಎತ್ತುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಆತ್ಮಹತ್ಯೆ, ಕೊಲೆ ಪ್ರಕರಣಗಳು ಹೆಚ್ಚಾಗಿವೆ ಎಂದು ಟೀಕಾ ಪ್ರಹಾರ ನಡೆಸಿದರು.
‘ರಾಜ್ಯ ಸರಕಾರ ಕೋಮುವಾದಿಯಾಗಿ ಮಾರ್ಪಟ್ಟಿದ್ದು, ಗೂಂಡಾಗಳು ಮತ್ತು ಪುಂಡರಿಗೆ ಭಯ ಇಲ್ಲದಂತಾಗಿದೆ. ಒಂದು ಸಮುದಾಯದ ಜನರು ರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ,ಆದರೆ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಪ್ರಕರಣವನ್ನು ವಜಾಗೊಳಿಸಲಾಗಿದೆ. ಇದು ಅವರು ಏನು ಮಾಡಿದರೂ ಪುಂಡರ ಜೊತೆಗಿದ್ದೇವೆ ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.
ಬಿಜೆಪಿ ಲೋಕಸಭೆ ಚುನಾವಣೆ ಎದುರಿಸಲು ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ವರ್ಷದ ಹಿಂದೆ ಯಾರೂ ಊಹಿಸಿರಲಿಲ್ಲ. ಮೈತ್ರಿ ಪ್ರಯೋಗ ಯಶಸ್ವಿಯಾಗಿದ್ದು, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಸರಿಗಟ್ಟಿ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲು ನೆರವಾಗಿರುವುದರಿಂದ ಎರಡೂ ಪಕ್ಷಗಳಿಗೆ ಲಾಭವಾಗಲಿದೆ ಎಂದು ಹೇಳಿದರು.