ಮಂಗಳೂರು:
ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು.
ಇದೇ ವೇಳೆ ಚನ್ನಪಟ್ಟಣಕ್ಕೆ ಡಿಕೆ.ಶಿವಕುಮಾರ್ ಏನೂ ಮಾಡಿಲ್ಲ ಎಂಬ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂಬುದು ಕುಮಾರಸ್ವಾಮಿಗೇನು ಗೊತ್ತು? ನಾನು 1985ರಲ್ಲೇ ಅವರ ತಂದೆ ವಿರುದ್ಧ ಚುನಾವಣೆಗೆ ನಿಂತವನು.
ಕುಮಾರಸ್ವಾಮಿ 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆೆ ಮಾಡಬೇಕಿದೆ. ಈಗ ಉತ್ತಮ ಸಮಯ ಒದಗಿಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆಂದು ತಿಳಿಸಿದರು.
ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸಲು ಡಿ.ಕೆ.ಸುರೇಶ್ ಅವರಿಗೆ ಆಸಕ್ತಿ ಇಲ್ಲ. ಜನರು ಸುರೇಶ್’ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ, ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತ ಕೊಟ್ಟಿದ್ದಾರೆ. ದೇವರಂಥ ಜನ ರಾಜ್ಯದಲ್ಲಿ ನಮಗೆ 136 ಸ್ಥಾನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಜನರ ಅಭಿವೃದ್ಧಿಗೆ ವಿನಿಯೋಗಿಸಬೇಕಿದೆ ಎಂದರು.
![](https://prajapragathi.com/wp-content/uploads/2022/07/1022043-shivakumar-1.webp)